ಶಿಡ್ಲಘಟ್ಟ: ಪಟ್ಟಣದ ಹೊರವಲಯದಲ್ಲಿರುವ ಗೌಡನಕೆರೆಯಲ್ಲಿ ಕೆಲ ಗ್ರಾಮಸ್ಥರು ಸೇರಿಕೊಂಡು ರಸ್ತೆಯನ್ನು ನಿರ್ಮಿಸಿದ್ದಾರೆ. ಸರ್ಕಾರಿ ಇಲಾಖೆ ಅಥವಾ ಅಧಿಕಾರಿಗಳ ಗಮನಕ್ಕೆ ತಾರದೆ ಮತ್ತು ಅನುಮತಿಯನ್ನು ಪಡೆಯದೆ ರಸ್ತೆ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ.
ಕೆರೆ, ಕುಂಟೆ, ಗೋಮಾಳ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಲ್ಲಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ ಈವರೆಗೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿಲ್ಲ. ತಾಲ್ಲೂಕು ಆಡಳಿತವು ಇದರ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.
ಕೆಲ ವ್ಯಕ್ತಿಗಳು ತಮ್ಮ ಜಮೀನನ್ನು ನಿವೇಶನಗಳನ್ನಾಗಿ ಪರಿವರ್ತಿಸಲು ಇಂತಹ ಕೃತ್ಯವೆಸಗಿದ್ದಾರೆ. ಗೌಡನಕೆರೆಯಲ್ಲಿ ಅಕ್ರಮವಾಗಿ ರಸ್ತೆ ನಿರ್ಮಿಸಿದ್ದಾರೆ. ಇದು ಗೊತ್ತಿದ್ದರೂ ಯಾವೊಬ್ಬ ಅಧಿಕಾರಿಯೂ ಕ್ರಮ ಕೈಗೊಳ್ಳುತ್ತಿಲ್ಲ. ಎಲ್ಲರ ಎದುರೇ ಕೆರೆಯನ್ನು ಅತಿಕ್ರಮಣ ಮಾಡಿಕೊಂಡು ಜೆಸಿಬಿ ವಾಹನದ ನೆರವಿನಿಂದ ರಸ್ತೆಯನ್ನು ನಿರ್ಮಿಸಲಾಗಿದೆ. ಕೆರೆಯನ್ನು ಸಂರಕ್ಷಣೆ ಮತ್ತು ನಿರ್ವಹಣೆ ಮಾಡಬೇಕಾದ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸಹ ಇದರತ್ತ ಆಸಕ್ತಿ ತೋರುತ್ತಿಲ್ಲ ಎಂದು ಸಾರ್ವಜನಿಕರು ಹೇಳುತ್ತಾರೆ.
ಕೆಲ ವ್ಯಕ್ತಿಗಳು ಕೆರೆಯಲ್ಲಿ ಅಕ್ರಮವಾಗಿ ರಸ್ತೆಯನ್ನು ನಿರ್ಮಿಸಿರುವುದು ಗಮನಕ್ಕೆ ಬಂದಿದೆ. ಇದು ಸಣ್ಣ ನೀರಾವರಿ ಇಲಾಖೆಗೆ ಸೇರಿದ್ದರಿಂದ ಅವರು ಮೊದಲು ದೂರು ದಾಖಲಿಸಿ, ತಹಶೀಲ್ದಾರರ ಗಮನಕ್ಕೆ ತರಬೇಕು. ಆನಂತರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ರಾಜಸ್ವ ನಿರೀಕ್ಷಕ ಮಂಜುನಾಥ್ `ಪ್ರಜಾವಾಣಿ~ಗೆ ತಿಳಿಸಿದರು.