ಪಿರಿಯಾಪಟ್ಟಣ: ಅಗತ್ಯ ವಸ್ತುಗಳ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ತಾಲ್ಲೂಕು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಮೋಟಾರ್ ಬೈಕ್ ರ್ಯಾಲಿ ನಡೆಸಿದರು.
ಪಟ್ಟಣದ ಬಿ.ಎಂ. ರಸ್ತೆಯಲ್ಲಿ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ತಹಶೀಲ್ದಾರ್ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ರಾಷ್ಟ್ರಪತಿಗೆ ತಹಶೀಲ್ದಾರ್ ಎಂ.ಕೆ. ಸವಿತಾ ಮೂಲಕ ಮನವಿ ಸಲ್ಲಿಸಿದರು.
ಬಿಜೆಪಿ ಮುಖಂಡ ಆರ್.ಟಿ. ಸತೀಶ್ ಮಾತನಾಡಿ, ದಿನನಿತ್ಯ ವಸ್ತುಗಳ ಬೆಲೆಯನ್ನು ಏರಿಸುವುದರ ಮೂಲಕ ಕೇಂದ್ರ ಸರ್ಕಾರವು ಜನಸಾಮಾನ್ಯರನ್ನು ಆರ್ಥಿಕ ಮುಗ್ಗಟ್ಟಿಗೆ ದೂಡುತ್ತಿದೆ. ಇದರಿಂದಾಗಿ ಜನರು ಆರ್ಥಿಕ ಅಭಿವೃದ್ದಿ ಹೊಂದಲು ಸಾಧ್ಯವಿಲ್ಲ. ಆದ್ದರಿಂದ ಘನತವೆತ್ತ ರಾಷ್ಟ್ರಪತಿಗಳು ಮಧ್ಯ ಪ್ರವೇಶಮಾಡಿ ಕುಸಿಯುತ್ತಿರುವ ದೇಶದ ಅರ್ಥ ವ್ಯವಸ್ತೆಯನ್ನು ಸರಿಪಡಿಸಲು ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಯುವ ಮೋರ್ಚಾ ಅಧ್ಯಕ್ಷ ಮಾಗಳಿ ರವಿ, ಪ್ರಧಾನ ಕಾರ್ಯದರ್ಶಿ ಸಿ.ಕೆ. ಪ್ರಸನ್ನಕೇಶವ, ಜಿ.ಸಿ. ವಿಕ್ರಂರಾಜ್, ಬೆಮ್ಮತ್ತಿ ಕೃಷ್ಣ, ಅಲ್ಪ ಸಂಖ್ಯಾತರ ಜಿಲ್ಲಾ ಅಧ್ಯಕ್ಷ ರಾಜೇಗೌಡ, ಶಿವಸ್ವಾಮಿ, ಭಾಗ್ಯಾ, ಮನು, ಆನಂದ, ಕಾಂತರಾಜ್ ಹಾಜರಿದ್ದರು.