ಬೆಂಗಳೂರು: ನೈಸರ್ಗಿಕ ಇಂಧನದ ಲಭ್ಯತೆ ಮತ್ತು ಅದರ ಬೆಲೆ ನಿಗದಿ ಕುರಿತು ಕೇಂದ್ರ ಸರ್ಕಾರ ಸ್ಪಷ್ಟ ನೀತಿ ಅನುಸರಿಸುತ್ತಿಲ್ಲ ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ಅಸಮಾಧಾನ ವ್ಯಕ್ತಪಡಿಸಿದರು.
ಭಾರತೀಯ ಕೈಗಾರಿಕೆಗಳ ಒಕ್ಕೂಟ ಆಯೋಜಿಸಿರುವ `ಸುಸ್ಥಿರ ಭವಿಷ್ಯಕ್ಕಾಗಿ ಇಂಧನ ನಿರ್ವಹಣೆ~ ಕುರಿತ ಎರಡು ದಿನಗಳ ಕಾರ್ಯಾಗಾರವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.
`ನೈಸರ್ಗಿಕ ಅನಿಲದ ಮಾರುಕಟ್ಟೆ ಬೆಲೆ ಕೂಡ ದುಬಾರಿಯಾಗಿದೆ. ಈ ಕುರಿತು ಕೇಂದ್ರ ಇಂಧನ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು~ ಎಂದು ಅವರು ಹೇಳಿದರು. ರಾಜ್ಯದ ಹೆಚ್ಚಿನ ಉಷ್ಣ ವಿದ್ಯುತ್ ಸ್ಥಾವರಗಳು ಕಲ್ಲಿದ್ದಲನ್ನು ಅವಲಂಬಿಸಿವೆ. ಆದರೆ, ಕೇಂದ್ರ ಸರ್ಕಾರ ಕಲ್ಲಿದ್ದಲು ಪೂರೈಸುವ ವಿಷಯದಲ್ಲಿ ರಾಜ್ಯದ ಮಟ್ಟಿಗೆ ಹೆಚ್ಚು ಸಹಕಾರಿಯಾಗಿಲ್ಲ ಎಂದರು.
ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರಗಳನ್ನು ನಿರ್ಮಿಸಲು ಹೆಚ್ಚಿನ ಕಾಲಾವಧಿ ಬೇಕು. ನೈಸರ್ಗಿಕ ಅನಿಲ ಆಧಾರಿತ ಉಷ್ಣ ವಿದ್ಯುತ್ ಸ್ಥಾವರ ನಿರ್ಮಾಣದಲ್ಲಿ ಈ ಸಮಸ್ಯೆ ಇಲ್ಲ. ನೈಸರ್ಗಿಕ ಅನಿಲ ಲಭ್ಯತೆ ಕುರಿತು ಕೇಂದ್ರ ಸರ್ಕಾರ ಸ್ಪಷ್ಟ ನೀತಿ ಅನುಸರಿಸದ ಕಾರಣ ಈ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರಲು ಆಗುತ್ತಿಲ್ಲ ಎಂದರು.
630 ಮೆಗಾ ವಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಸ್ಥಾವರ ನಿರ್ಮಾಣಕ್ಕೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು. ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತ ವರದಿಯನ್ನು ಅವರು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.
ಸಿಐಐನ ರಾಜ್ಯ ಘಟಕದ ಅಧ್ಯಕ್ಷ ಎಸ್. ಚಂದ್ರಶೇಖರ್ ಮಾತನಾಡಿ, `ರಾಜ್ಯದ ಇಂಧನ ಬೇಡಿಕೆಗೆ ನೈಸರ್ಗಿಕ ಅನಿಲ ಆಧಾರಿತ ಉಷ್ಣ ವಿದ್ಯುತ್ ಸ್ಥಾವರಗಳು ಉತ್ತಮ ಪರ್ಯಾಯವಾಗಬಲ್ಲವು~ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಡಿಕೇರಿ: ಐಎಫ್ಎಸ್ ಅಧಿಕಾರಿ ನೇಮಕ
ಬೆಂಗಳೂರು: ಹುದ್ದೆ ನಿರೀಕ್ಷೆಯಲ್ಲಿದ್ದ ಐಎಫ್ಎಸ್ ಅಧಿಕಾರಿ ಜಿ.ಎಸ್. ಯಾದವ್ ಅವರನ್ನು ಮಡಿಕೇರಿ ಅರಣ್ಯ ಸಂರಕ್ಷಣಾಧಿಕಾರಿಯನ್ನಾಗಿ (ಸಂಶೋಧನೆ) ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಆಂತರಿಕ ಭದ್ರತಾ ವಿಭಾಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಸುಬ್ರಹ್ಮಣೇಶ್ವರ ರಾವ್ ಅವರನ್ನು ಕೇಂದ್ರ ಸೇವೆಗೆ ನಿಯೋಜಿಸಲಾಗಿದ್ದು ಅವರು ಸಿಬಿಐನಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.