ಬಳ್ಳಾರಿ: ಕೇಂದ್ರ ಸರ್ಕಾರ ಬರ ಪರಿಹಾರ ಕಾಮಗಾರಿಗಳಿಗಾಗಿ ರಾಜ್ಯಕ್ಕೆ ರೂ 350 ಕೋಟಿ ಬಿಡುಗಡೆ ಮಾಡಿದೆ. ಇತ್ತೀಚೆಗೆ ಭೇಟಿ ನೀಡಿದ್ದ ಕೇಂದ್ರದ ಬರ ಅಧ್ಯಯನ ತಂಡ ರಾಜ್ಯದಲ್ಲಿ ರೂ 6 ಸಾವಿರ ಕೋಟಿ ನಷ್ಟವಾಗಿದೆ ಎಂದು ವರದಿ ಸಲ್ಲಿಸಿದೆ ಎಂದು ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.
ಬರ ಪರಿಹಾರ ಕಾಮಗಾರಿ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭಾನುವಾರ ಪರಿಶೀಲನೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿ, ರಾಜ್ಯ ಸರ್ಕಾರ ಈಗಾಗಲೇ ರೂ 2 ಸಾವಿರ ಕೋಟಿ ಮೊತ್ತದ ಬರ ಪರಿಹಾರ ಕಾಮಗಾರಿ ಕೈಗೊಂಡಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವೂ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಬೇಕಿದೆ ಎಂದರು.
ಬರ ಪರಿಹಾರ ಕಾಮಗಾರಿಗಳನ್ನು ನಿರ್ವಹಿಸಲು ಹಣದ ಸಮಸ್ಯೆ ಇಲ್ಲ. ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಸಭೆಯಲ್ಲೇ ಬರಕ್ಕೆ ಪ್ರಥಮ ಆದ್ಯತೆ ನೀಡಲು ನಿರ್ಧರಿಸಿದ್ದಾರೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಅಧಿಕಾರಿಗಳು ಬರ ನಿರ್ವಹಣೆ ಕುರಿತು ಕೈಗೊಂಡಿರುವ ಕಾಮಗಾರಿಗಳು ತೃಪ್ತಿಕರವಾಗಿವೆ. ಕೆಲವು ಗ್ರಾಮ ಪಂಚಾಯಿತಿಗಳು ಕ್ರಿಯಾ ಯೋಜನೆಯನ್ನು ತಡವಾಗಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕಾಮಗಾರಿಗಳ ಅನು ಮೋದನೆ ಪಡೆಯುವಲ್ಲಿ ವಿಳಂಬ ವಾಗಿದೆ. ಉಳಿದಂತೆ ಬರದ ನಿರ್ವಹಣೆ ಉತ್ತಮವಾಗಿದೆ ಎಂದರು.
ಬಳ್ಳಾರಿ ನಗರಕ್ಕೆ ಕುಡಿಯುವ ನೀರು ಒದಗಿಸಲು ತುಂಗಭದ್ರಾ ಮಂಡಳಿ, ಆಂಧ್ರಪ್ರದೇಶ ಸರ್ಕಾರ ಮತ್ತು ಅಧಿಕಾರಿಗಳ ಜತೆ ಚರ್ಚಿಸಿ ಕಾಲುವೆಗೆ ನೀರು ಬಿಡಿಸಲಾಗುವುದು ಎಂದು ಅವರು ವಿವರಿಸಿದರು.
ಕುಡಿಯುವ ನೀರಿನ ಕೊರತೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕಿದೆ. ನೀರಿನ ದುರ್ಬಳಕೆ ತಡೆಯಲು ಸ್ವಯಂ ನಿಯಂತ್ರಣ ಹೇರಿಕೊಳ್ಳಬೇಕಿದೆ. ಕಾರು ತೊಳೆಯಲು ನೀರು ಪೋಲು ಮಾಡ ಬಾರದು ಎಂದು ಮನವಿ ಮಾಡಿದರು.
ಎಸ್.ಎಂ. ಕೃಷ್ಣ ಸರ್ಕಾರದಲ್ಲಿ ನಡೆದಿರುವ ಮೋಡ ಬಿತ್ತನೆ ಪ್ರಕ್ರಿಯೆಯ ಫಲಿತಾಂಶವನ್ನು ಆಧರಿಸಿ ರಾಜ್ಯದಲ್ಲಿ ಈ ಬಾರಿಯೂ ಮೋಡ ಬಿತ್ತನೆ ನಡೆಸುವ ಕುರಿತು ಚಿಂತನೆ ನಡೆಸ ಲಾಗುತ್ತದೆ ಎಂದು ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ, ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಂಜು ನಾಥ ನಾಯಕ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.