ತಿ.ನರಸೀಪುರ: `ಕೇಂದ್ರ ಸರ್ಕಾರ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಕಡ್ಡಾಯ ಶಿಕ್ಷಣ ನೀತಿ ಜಾರಿಗೊಳಿಸಿದೆ~ ಎಂದು ಚಾಮರಾಜನಗರ ಲೋಕಸಭಾ ಸದಸ್ಯ ಆರ್. ಧ್ರುವನಾರಾಯಣ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದ ಗುರುಚನ್ನ ಮಲ್ಲಿಕಾರ್ಜುನ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಪ್ರತಿ ಹಳ್ಳಿಯಲ್ಲೂ ಪ್ರಾಥಮಿಕ ಶಿಕ್ಷಣಕ್ಕಾಗಿ ಶಾಲೆ ಆರಂಭಿಸಲಾಗಿದೆ. ಸರ್ವ ಶಿಕ್ಷಣ ಅಭಿಯಾನದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ. ಆದರೂ ದೇಶದಲ್ಲಿ ಶೇ 30ರಷ್ಟು ಅನಕ್ಷರಸ್ಥರಿದ್ದಾರೆ. ಪ್ರತಿಯೊಬ್ಬರಿಗೂ ಅಕ್ಷರ ಜ್ಞಾನ ಸಿಗಬೇಕು ಎಂಬುದು ಸರ್ಕಾರದ ಆಶಯ ಎಂದರು.
ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರ ನೀಡುವ ಸೌಲಭ್ಯ ನೀಡಿ ಶಾಲೆಗಳನ್ನು ನಡೆಸುವುದು ಬಹಳ ದುಸ್ತರ. ಇಂತಹ ಸ್ಥಿತಿಯಲ್ಲೂ ಅನೇಕ ಖಾಸಗಿ ಸಂಸ್ಥೆಗಳು ಸಮಾಜಕ್ಕೆ ಶೈಕ್ಷಣಿಕ ಸೇವೆ ನೀಡುತ್ತಾ ಬಂದಿವೆ. ಜೆಎಸ್ಎಸ್ ಶಿಕ್ಷಣ ಸಂಸ್ಥೆ ಗ್ರಾಮಾಂತರ ಪ್ರದೇಶಗಳು ಜತೆಗೆ ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಸುಮಾರು 350 ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದೆ. ಸ್ವಾಮೀಜಿ ಪ್ರಾರಂಭಿಸುವ ಶಿಕ್ಷಣ ಸಂಸ್ಥೆಗಳು ಎಂದಿಗೂ ಹಿನ್ನೆಡೆಯಾಗುವುದಿಲ್ಲ. ಮಾಡ್ರಹಳ್ಳಿ ಮಠದ ಸ್ವಾಮೀಜಿ ಸಂಸ್ಥೆಯನ್ನು ಸಾಕಷ್ಟು ಅಭಿ ವೃದ್ಧಿಪಡಿಸಿದ್ದಾರೆ ಎಂದು ಹೇಳಿದರು.
ವಿದ್ಯೋದಯ ಪ್ರಥಮ ದರ್ಜೆ ಕಾಲೇಜಿನ ಹಿರಿಯ ಪ್ರಾದ್ಯಾಪಕಿ ಡಾ.ಸಿ.ಜಿ. ಉಷಾದೇವಿ ಮಾತನಾಡಿ, ಮಕ್ಕಳ ಶಿಕ್ಷಣಕ್ಕಾಗಿ ಪೋಷಕರು ಇಂದು ಬಹಳ ಶ್ರಮವಹಿಸುತ್ತಿದ್ದಾರೆ. ವಿದ್ಯಾರ್ಥಿ ಗಳು ಸದನ್ನು ಅರಿತು ಚೆನ್ನಾಗಿ ಓದಬೇಕು. ಇದರಿಂಧ ಪೋಷಕರ ಶ್ರಮ ಸಾರ್ಥಕವಾಗುತ್ತದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎ. ಲೋಕೇಶ್, ಜಿ.ಪಂ. ಮಾಜಿ ಅಧ್ಯಕ್ಷ ಎಸ್.ಎನ್. ಸಿದ್ದಾರ್ಥ ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು. ಜಿ.ಪಂ. ಸದಸ್ಯೆ ರೇಣುಕಾ ನಾಗರಾಜು, ಬೈರಾಪುರ ಗ್ರಾ.ಪಂ. ಅಧ್ಯಕ್ಷ ಟಿ.ಎಂ. ನಂಜುಂಡ ಸ್ವಾಮಿ. ಚಾಮರಾಜನಗರ ತಾಲ್ಲೂಕು ಎಪಿಎಂಸಿ ನಿರ್ದೇಶಕ ಆಲ್ದೂರ್ ರಾಜಶೇಖರ್ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಸಂಸ್ಥೆ ಸಂಸ್ಥಾಪಕ ಹಾಗೂ ಮಾಡ್ರಹಳ್ಳಿ ಮಠದ ಶಾಂತಮಲ್ಲಿ ಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮುಖ್ಯ ಶಿಕ್ಷಕಿ ಪ್ರೇಮಾ ಹಾಗೂ ಸಿಬ್ಬಂದಿ ವರ್ಗ, ಪೋಷಕರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.