ಕೊಪ್ಪಳ: ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬೃಹತ್ ಹಾಗೂ ಮಧ್ಯಮ ಪ್ರಮಾಣದ ಕೈಗಾರಿಕೆಗಳಿಂದ ನಿಯಮಾನುಸಾರ ತೆರಿಗೆ ಸಂಗ್ರಹಿಸಲು ಯಾವುದೇ ಕ್ರಮ ಕೈಗೊಂಡಿರದ ಬಗ್ಗೆ ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ಮಂಗಳವಾರ ಇಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳ್ಳುವ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ತಾಲ್ಲೂಕಿನಲ್ಲಿ ಉಕ್ಕಿನ ಕಾರ್ಖಾನೆಗಳು ಸೇರಿದಂತೆ ಹಲವು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳಿವೆ. ಕುಷ್ಟಗಿ ತಾಲ್ಲೂಕಿನಲ್ಲಿ ಗ್ರಾನೈಟ್ ಉದ್ಯಮಗಳಿವೆ. ಗಂಗಾವತಿ ತಾಲ್ಲೂಕಿನಲ್ಲಿ ರೈಸ್ ಮಿಲ್ಗಳಿವೆ. ಇಂತಹ ಕೈಗಾರಿಕೆಗಳಿಂದ ಆಯಾ ಗ್ರಾಮ ಪಂಚಾಯಿತಿಗಳು ನಿಯಮಾನುಸಾರ ತೆರಿಗೆ ಸಂಗ್ರಹಿಸಬಹುದು. ಹೀಗೆ ಸಂಗ್ರಹವಾಗುವ ಮೊತ್ತದಿಂದ ಗ್ರಾಮಗಳ ಅಭಿವೃದ್ಧಿ ಮಾಡಿಕೊಳ್ಳಬಹುದು. ಜಿಲ್ಲೆಯಲ್ಲಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಂಪೂರ್ಣ ವಿವರವನ್ನು ಪಡೆದು, ಈ ಕುರಿತು ಸೂಕ್ತ ಕ್ರಮ ಜರುಗಿಸಿ ವರದಿ ಸಲ್ಲಿಸುವಂತೆ ಸಚಿವರು ಸಿಇಒ ಗೆಸೂಚಿಸಿದರು.
ಜಿ.ಪಂ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಉಪಾಧ್ಯಕ್ಷೆ ಡಾ.ಸೀತಾ ಹಲಗೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್, ಅಪರ ಜಿಲ್ಲಾಧಿಕಾರಿ ಬಿ.ಪಿ. ಅಡ್ನೂರ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ವಿನಯಕುಮಾರ್, ನಾಗನಗೌಡ ಪಾಟೀಲ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.