ಬೆಂಗಳೂರು: ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುವ ಸಂಬಂಧ ರೂಪಿಸಿರುವ ಮಾರ್ಗಸೂಚಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಕನಿಷ್ಠ 14 ವರ್ಷ ಶಿಕ್ಷೆ ಅನುಭವಿಸಿರುವ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಸಂಪುಟ ಸಭೆಯ ನಂತರ ಕಾನೂನು ಸಚಿವ ಟಿ.ಬಿ.ಜಯಚಂದ್ರ ಸುದ್ದಿಗಾರರಿಗೆ ತಿಳಿಸಿದರು.
ಕೈದಿಗಳ ಬಿಡುಗಡೆಗೆ ಹಿಂದಿನ ಬಿಜೆಪಿ ಸರ್ಕಾರ 2– 3 ಬಾರಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದ ರಾಜ್ಯಪಾಲ ಎಚ್.ಆರ್.ಭಾರದ್ವಾಜ್, ಮಾರ್ಗಸೂಚಿ ರೂಪಿಸುವಂತೆ ಸೂಚಿಸಿದ್ದರು.
ಆ ಪ್ರಕಾರ ಈಗ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಲಾಗುತ್ತದೆ.
ಬಿಡುಗಡೆ ನಂತರ ಅವರಿಂದ ಸಾರ್ವಜನಿಕರಿಗೆ, ಕೈದಿಗಳಿಂದ ಹಾನಿಗೆ ಒಳಗಾದವರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಂಡ ನಂತರವೇ ಸಮಿತಿ ಶಿಫಾರಸು ಮಾಡಬೇಕಾಗುತ್ತದೆ.
ಈ ಮಾರ್ಗಸೂಚಿ ಪ್ರಕಾರ 56 ಮಂದಿ ಕೈದಿಗಳು ಬಿಡುಗಡೆಗೆ ಅರ್ಹರಾಗಿದ್ದಾರೆ ಎನ್ನಲಾಗಿದೆ.