ಶಿವಮೊಗ್ಗ: ಸರ್ವೇ ಆಗಿರುವ ಜಿಲ್ಲೆಯ 48 ಕೊಳಚೆ ಪ್ರದೇಶಗಳಿಗೆ ಹಕ್ಕುಪತ್ರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಕೊಳೆಗೇರಿ ನಿವಾಸಿಗಳ ಸಂಘಟನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.
ಕೊಳಚೆ ಪ್ರದೇಶದಲ್ಲಿ ಅನೇಕ ವರ್ಷಗಳಿಂದ ವಾಸಿಸುತ್ತಿರುವ ಬಡಕಾರ್ಮಿಕರು, ಕೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಮತ್ತು ಹಿಂದುಳಿದವರಿಗೆ ಸರ್ಕಾರ ಇಲ್ಲಿಯವರೆಗೆ ಹಕ್ಕುಪತ್ರ ನೀಡಿಲ್ಲ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಎಲ್ಲಾ ಸ್ಲಂಗಳನ್ನು ಕೊಳಚೆ ಪ್ರದೇಶ ಎಂದು ಘೋಷಿಸಿರುವ ಮತ್ತು ಸರ್ವೇ ಮಾಡಿರುವ ಎಲ್ಲಾ ಪ್ರದೇಶಗಳಿಗೆ ಹಕ್ಕುಪತ್ರ ನೀಡಬೇಕು. ಪರಿಚಯ ಪತ್ರ ನೀಡಬಾರದು ಎಂದು ಆಗ್ರಹಿಸಿದರು.
ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಇಲ್ಲಿಯ ತನಕ ಆಶ್ರಯ ಸಮಿತಿ, ಆಶ್ರಯ ಯೋಜನೆಯಡಿ ಸೂರು ಇಲ್ಲದವರಿಗೆ ಯಾವುದೇ ನಿವೇಶನ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಿದರು.
ಸಂಘಟನೆಯ ಪದಾಧಿಕಾರಿಗಳಾದ ನಿಂಬೆಹಣ್ಣು ಮಂಜುನಾಥ್, ಶ್ರೀನಿವಾಸ್, ಮಂಜಪ್ಪ, ಭೀಮಪ್ಪ, ರಘು, ಸತೀಶ್ ಮತ್ತಿತರರು ಧರಣಿಯ ನೇತೃತ್ವ ವಹಿಸಿದ್ದರು.