ಕೋಲಾರ: ತಾಲ್ಲೂಕಿನಾದ್ಯಂತ 33,313 ಮನೆಗಳಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ. ಈ ನಿಟ್ಟಿನಲ್ಲಿ ಪ್ರಸ್ತುತ ಸಾಲಿನಲ್ಲಿ 5,535 ಶೌಚಾಲಯಗಳನ್ನು ನಿರ್ಮಿಸುವ ಗುರಿ ಇದೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯಗಳ ಬಳಕೆ ಕುರಿತು ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯಬೇಕಾಗಿದೆ ಎಂದು ನಿರ್ಮಲ ಭಾರತ ಅಭಿಯಾನದ ಜಿಲ್ಲಾ ಸಮಾಲೋಚಕ ಎನ್.ಮುನಿಸ್ವಾಮಿನಾಯ್ಡು ಹೇಳಿದರು.
ಶೌಚಾಲಯ ನಿರ್ಮಾಣದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ನಗರದ ತಾಲ್ಲೂಕು ಪಂಚಾಯತಿ ಸಾಮರ್ಥ್ಯ ಸೌಧದಲ್ಲಿ ಗುರುವಾರ ನಿರ್ಮಲ ಭಾರತ ಅಭಿಯಾನದ ವತಿಯಿಂದ ಗ್ರಾಮ ಪಂಚಾಯತಿ ಸದಸ್ಯರಿಗೆ ಏರ್ಪಡಿಸಿದ್ದ ಶಿಕ್ಷಣ ಮತ್ತು ಸಂವಹನ ಕಾರ್ಯಾಗಾರದಲ್ಲಿ ಮಾತನಾಡಿ, ಸ್ವಾತಂತ್ರ್ಯಕ್ಕಿಂತಲೂ ಸ್ವಚ್ಛತೆಯೇ ಶ್ರೇಷ್ಠ ಎಂಬುದನ್ನು ಅರಿಯಬೇಕಾಗಿದೆ ಎಂದರು.
ಈ ಮುಂಚೆ ಅಸ್ತಿತ್ವದಲ್ಲಿದ್ದ ಸಂಪೂರ್ಣ ಸ್ವಚ್ಛತಾ ಆಂದೋಲನದ ನಿಗದಿತ ಗುರಿಯು ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳದ ಪರಿಣಾಮ-ವಾಗಿ ನಿರ್ಮಲ ಭಾರತ ಅಭಿಯಾನವನ್ನು ರೂಪಿಸಲಾಗಿದೆ. 33 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಶೌಚಾಲಯ ಸೌಕರ್ಯವಿಲ್ಲ ಎಂಬುದು ಶೋಚನೀಯ ಸಂಗತಿ ಎಂದು ಹೇಳಿದರು.
ಮುಂದಿನ 5 ವರ್ಷದಲ್ಲಿ ತಾಲ್ಲೂಕಿನ ಎಲ್ಲ ಗ್ರಾಮೀಣ ಕುಟುಂಬಗಳಲ್ಲಿ ಶೌಚಾಲಯ ನಿರ್ಮಿಸುವಲ್ಲಿ ಜನ ಜಾಗೃತಿ ಮೂಡಿಸಬೇಕಾಗಿದೆ ಎಂದರು. ಅಭಿಯಾನದ ಸಂಯೋಜಕ ಜಿ.ಶ್ರೀನಿವಾಸ್, 27ರವರೆಗೂ ಕಾರ್ಯಾಗಾರ ನಡೆಯಲಿದೆ, 20ರಂದು ಹುತ್ತೂರು ಹೋಬಳಿ, 21–ಸುಗಟೂರು, 23–ನರಸಾಪುರ, 24–ವಕ್ಕಲೇರಿ, 26–ವೇಮಗಲ್ ಮತ್ತು 27–ಅರಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾ.ಪಂ.ಸದಸ್ಯರಿಗೆ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.