ಕುಶಾಲನಗರ: ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕ್ಯಾರಿ ಓವರ್ ಪದ್ಧತಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ಪಾಲಿಟೆಕ್ನಿಕ್ ವಿದ್ಯಾರ್ಥಿ ಸಂಘದ ವತಿಯಿಂದ ಶುಕ್ರವಾರ ಇಲ್ಲಿ ಪ್ರತಿಭಟನೆ ನಡೆಯಿತು.
ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು ಕಾಲೇಜಿನ ಮುಂಭಾಗದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದರು. ಕುಶಾಲನಗರ - ಮಡಿಕೇರಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದರು. ಇದರಿಂದ ಸಂಚಾರ ವ್ಯವಸ್ಥೆಗೆ ಅಡಚಣೆ ಉಂಟಾಯಿತು. ಕ್ಯಾರಿ ಓವರ್ ಪದ್ಧತಿಯನ್ನು ರದ್ದುಗೊಳಿಸಿರುವ ತಾಂತ್ರಿಕ ಶಿಕ್ಷಣ ಇಲಾಖೆಯ ಕ್ರಮವನ್ನು ಖಂಡಿಸಿದ ವಿದ್ಯಾರ್ಥಿಗಳು, ಡಿಪ್ಲೊಮಾ ಕೋರ್ಸ್ಗೆ ಈ ಹಿಂದೆ ಜಾರಿಯಲ್ಲಿದ್ದ ಕ್ಯಾರಿ ಓವರ್ ಪದ್ಧತಿಯನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಪಾಲಿಟೆಕ್ನಿಕ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈಗಾಗಲೇ ಒಂದರಿಂದ ನಾಲ್ಕನೇ ಸೆಮಿಸ್ಟರ್ ತನಕ ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣರಾದವರು 5ನೇ ಸೆಮಿಸ್ಟರ್ಗೆ ಪ್ರವೇಶ ಪಡೆಯಲು ಅವಕಾಶವಿತ್ತು. ಆದರೆ ತಾಂತ್ರಿಕ ಶಿಕ್ಷಣ ಇಲಾಖೆಯ ಅವೈಜ್ಞಾನಿಕ ನೀತಿಯಿಂದ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ನವನೀತ್ ಪೊನ್ನೆಟ್ಟಿ, ಮುಖಂಡರಾದ ರಾಜೇಶ್, ಧನುಶ್, ಧನಂಜಯ, ರಾಘವೇಂದ್ರ, ನಾಣಿ, ಮೋಹನ್ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.