ಬಾಗಲಕೋಟೆ: ಕ್ರೀಡೆಯಲ್ಲಿ ಉನ್ನತಮಟ್ಟದ ಸಾಧನೆ ಮಾಡುವ ಪೊಲೀಸ್ ಸಿಬ್ಬಂದಿಗೆ ಬಡ್ತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾನಿರೀಕ್ಷಕ ಕೆ.ಎಸ್.ಆರ್.ಚರಣರೆಡ್ಡಿ ತಿಳಿಸಿದರು.
ನವನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ ವಾರ್ಷಿಕ ಪೊಲೀಸ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅವರು ವಿಜೇತರಾದವರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಪೊಲೀಸ್ ಸಿಬ್ಬಂದಿ ಕ್ರೀಡೆಯಲ್ಲಿ ತೋರಿಸುವ ಸ್ಪರ್ಧಾ ಮನೋಭಾವನೆಯನ್ನು ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪೊಲೀಸ್ ಇಲಾಖೆ ಮತ್ತು ಕ್ರೀಡೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ರಾಜ್ಯದಲ್ಲಿ ಕ್ರೀಡೆಗಳಿಗೆ ಹೆಚ್ಚು ಪ್ರೋತ್ಸಾಹ ನೀಡುವ ಇಲಾಖೆ ಎಂದರೆ ಪೊಲೀಸ್ ಇಲಾಖೆ ಎಂದು ತಿಳಿಸಿದರು. ಪೊಲೀಸ್ ಇಲಾಖೆಯಲ್ಲಿರುವ ಎಲ್ಲರು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಕ್ರೀಡೆಗೆ ಒತ್ತು ನೀಡಬೇಕು ಎಂದು ಹೇಳಿದರು.
ಶ್ಲಾಘನೀಯ: ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಉತ್ತಮ ಕೆಲಸ ಮಾಡುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಉನ್ನತಮಟ್ಟದ ಸಾಧನೆಯನ್ನು ಮಾಡಿದೆ ಎಂದು ಶ್ಲಾಘಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಶ್ವರಚಂದ್ರ ವಿದ್ಯಾಸಾಗರ, ಮೂರು ದಿನಗಳ ಕಾಲ ಅಚ್ಚುಕಟ್ಟಾಗಿ ನಡೆಯಲು ಸಹಕಾರ ನೀಡಿದ ಎಲ್ಲ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಮತ್ತಿತರರಿಗೆ ಅಭಿನಂದನೆ ಸಲ್ಲಿಸಿದರು.
ಪ್ರತಿದಿನ ಕೆಲಸದ ಒತ್ತಡದಲ್ಲಿರುವ ಪೊಲೀಸ್ ಸಿಬ್ಬಂದಿಗಳಿಗೆ ಪ್ರತಿವರ್ಷ ಕ್ರೀಡಾಕೂಟವನ್ನು ಆಯೋಜಿಸುವ ಮೂಲಕ ಅವರಲ್ಲಿರುವ ಪ್ರತಿಭೆಯನ್ನು ತೋರಿಸಲು ವೇದಿಕೆಯನ್ನು ಕಲ್ಪಿಸಲಾಗುತ್ತಿದೆ ಎಂದರು. ಗಾಯತ್ರಿ ಚರಣ್ರೆಡ್ಡಿ, ರಾಜೇಶ್ವರಿ ವಿದ್ಯಾಸಾಗರ್, ಡಿವೈಎಸ್ಪಿ ವೀರನಗೌಡ, ಕಾಂಬಳೆ, ಸಿಪಿಐ ಸದಾಶಿವ ಕಟ್ಟಿಮನಿ, ಭೂಮರೆಡ್ಡಿ, ಪಿಎಸ್ಐ ಮಹಾಂತೇಶ ಹೊಸಪೇಟಿ, ವಿ.ಎನ್.ಖಡಿ, ವೆಂಕಟೇಶ ಯಡಹಳ್ಳಿ, ಗುರನಾಥ ಚವ್ಹಾಣ್, ಜಿ.ಎಲ್.ಗೌಳಿ ಮತ್ತಿತರರು ಉಪಸ್ಥಿತರಿದ್ದರು.