ನರಸಿಂಹರಾಜಪುರ: ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಎಸ್.ಎಸ್. ಶಾಂತಕುಮಾರ್ ತಿಳಿಸಿದರು.
ಇಲ್ಲಿನ ಕುವೆಂಪು ಕ್ರೀಡಾಂಗಣದಲ್ಲಿ ಭಾನುವಾರ ನಡೆದ ತಾಲ್ಲೂಕು ಮಟ್ಟದ ಆಹ್ವಾನಿತ ತಂಡಗಳ ಟೆನ್ನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನಾಂಗ ದಾರಿ ತಪ್ಪುತ್ತಿರುವ ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆಯಲ್ಲಿ ತೊಡಗಿಸಿ ಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.
ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಆರ್.ಸದಾಶಿವ ಮಾತನಾಡಿ, ಕ್ರೀಡಾಪಟುಗಳು ಜೀವನದಲ್ಲಿ ಕ್ರೀಡಾ ಮನೋಭಾವನೆಯನ್ನು ರೂಢಿಸಿ ಕೊಂಡಾಗ ಜೀವನದಲ್ಲಿ ಮತ್ತು ಸಮಾಜದಲ್ಲಿ ಯಾವುದೇ ಸಂದರ್ಭದಲ್ಲೂ ಎದುರಾಗ ಬಹುದಾದ ಸೋಲು- ಗೆಲುವು ಇವೆರಡೂ ಸಮಾನವಾಗಿ ಸ್ವೀಕ ರಿಸಿ ಸವಾಲನ್ನು ಸಮರ್ಥವಾಗಿ ಎದುರಿಸಲು ಸಹಾಯವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಕ್ರೀಡಾಕೂಟಗಳು ನಡೆಯುತ್ತಿರುವುದರಿಂದ ಕ್ರೀಡಾ ಚಟುವಟಿಕೆಗಳಿಗೆ ಪುನರುಜ್ಜೀವ ಬಂದಂತಾಗಿದೆ ಎಂದು ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಪ್ರೊ.ಕೆ.ಉಮೇಶ್ ಮಾತನಾಡಿ, ಕ್ರೀಡಾ ಚಟುವಟಿಕೆಗಳಲ್ಲಿ ಸಂಘ, ಸಂಸ್ಥೆಗಳು ಮಾತ್ರ ನಡೆಸದೆ ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಲು ಇದರಿಂದ ಸಾಧ್ಯ. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿದೆ ಎಂದರು.ಲೆದರ್ಬಾಲ್ ತರಬೇತುದಾರ ವಾಸುದೇವ್, ತಾಲ್ಲೂಕು ಬ್ಯಾರಿ ಒಕ್ಕೂಟದ ಅಧ್ಯಕ್ಷ ಎನ್.ಎ.ಶೇಖಬ್ಬ, ಪ್ರಮೋದ್ ಮತ್ತಿತರರು ಈ ಸಂದರ್ಭ ದಲ್ಲಿ ಇದ್ದರು.