ಕೊಳ್ಳೇಗಾಲ: `ಕ್ರೀಡಾಕೂಟ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಕಲಿಸಲಿದೆ. ಕ್ರೀಡೆಗಳಲ್ಲಿ ಬಹುಮಾನ ಗಳಿಸುವುದರ ಜೊತೆಗೆ ಇಂಥ ಶ್ರೇಷ್ಠ ಗುಣಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು' ಎಂದು ಶಾಸಕ ಆರ್. ನರೇಂದ್ರ ಕಿವಿಮಾತು ಹೇಳಿದರು.
ಪಟ್ಟಣದ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಸಿಂಗಾನಲ್ಲೂರು ಸರ್ಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಸೋಮವಾರ ನಡೆದ ಪ್ರೌಢಶಾಲಾ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಸೋಲು ಎಂಬುದು ಗೆಲುವಿನ ಹಾದಿಯ ಮೊದಲ ಮೆಟ್ಟಿಲು ಎಂಬ ಭಾವನೆ ನಿಮ್ಮೆಲ್ಲರಲ್ಲಿಯೂ ಮೂಡಲಿ ಎಂದು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಸ್. ಜಯಣ್ಣ, ತಾಲ್ಲೂಕಿನಲ್ಲಿ ಕ್ರೀಡೆಗಳು ನಶಿಸುತ್ತಿವೆ. ಈ ಹಿಂದೆ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ತಾಲ್ಲೂಕಿನ ಕ್ರೀಡಾಪಟುಗಳು ಸ್ಪರ್ಧಿಸಿ ತಾಲ್ಲೂಕಿನ ಕೀರ್ತಿ ಹೆಚ್ಚಿಸಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಕ್ರೀಡಾಪಟುಗಳು ನಶಿಸುತ್ತಿರುವುದು ವಿಷಾದನೀಯ ಎಂದರು.
ದೈಹಿಕ ಶಿಕ್ಷಣ ಶಿಕ್ಷಕರು ಉತ್ತಮ ಕ್ರೀಡಾಪಟುಗಳನ್ನು ತರಬೇತಿಗೊಳಿಸುವ ಮೂಲಕ ತಾಲ್ಲೂಕಿನ ಹಿರಿಮೆ ಮತ್ತೆ ಮರುಕಳಿಸುವಂತೆ ಮಾಡಬೇಕು ಎಂದರು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಶಿವಮ್ಮ, ಯಶೋಧಪ್ರಭುಸ್ವಾಮಿ, ಡಿ. ದೇವರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಎನ್. ಚಂದ್ರೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವಮ್ಮ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಮಾದಯ್ಯ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಹದೇವು, ದೈಹಿಕ ಶಿಕ್ಷಣ ಪರಿವೀಕ್ಷಕ ಜೆ. ಜಾರ್ಜ್ಪಿಲಿಪ್, ಸಂಘಟಕಿ ಸಿ. ಚಿನ್ನಮ್ಮ, ನಗರಸಭೆ ಮಾಜಿ ಸದಸ್ಯ ಮುಡಿಗುಂಡ ಶಾಂತರಾಜು ಇತರರು ಇದ್ದರು.