ಹೊಸದುರ್ಗ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದರೂ ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುತ್ತಿರುವುದು ವಿಷಾದನೀಯ ಎಂದು ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಬಸವರಾಜು ಹೇಳಿದರು.
ತಾಲ್ಲೂಕಿನ ಕೆಲ್ಲೋಡು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ `ಶಾಲೆಗಾಗಿ ನಾವು-ನೀವು~ ಕಾರ್ಯಕ್ರಮದಲ್ಲಿ ಮಕ್ಕಳ ಹಕ್ಕು ಕಾಯ್ದೆ ಮಾಹಿತಿ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಿಗೆ ಆರ್ಥಿವಾಗಿ ಹಿಂದುಳಿದ ಮಕ್ಕಳೇ ಹೆಚ್ಚಾಗಿ ಬರುತ್ತಾರೆ. ಶಿಕ್ಷಕರು ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಪ್ರತಿಭಾನ್ವಿತರನ್ನಾಗಿ ಮಾಡಬೇಕು ಎಂದು ಹೇಳಿದರು.
ಕ್ಷೇತ್ರ ಸಮನ್ವಯಾಧಿಕಾರಿ ಸೈಯದ್ ಮೌಸಿನ್ ಮಾತನಾಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಶಿಕ್ಷಕರ ಸಹಕಾರದೊಂದಿಗೆ ಸರ್ಕಾರಿ ಶಾಲೆ ಹಾಗೂ ಖಾಸಗಿ ಶಾಲೆ ಮಕ್ಕಳನ್ನು ಒಂದೆಡೆ ಸೇರಿಸಿ ಸಂವಾದ ನಡೆಸುವ ಮೂಲಕ ಕುಂದು ಕೊರತೆಗಳು ಕಂಡು ಬಂದಲ್ಲಿ ಅವುಗಳ ನಿವಾರಣೆಗೆ ಅಗತ್ಯ ಕಾರ್ಯಕ್ರಮ ರೂಪಿಸಬೇಕು ಎಂದರು.
ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ. ಅಧ್ಯಕ್ಷೆ ಪ್ರೇಮಾ, ಸದಸ್ಯರಾದ ರತ್ನಮ್ಮ, ಬಸವರಾಜ್, ಸಿಆರ್ಪಿ ಬಸವರಾಜು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಫಾಲಾಕ್ಷಪ್ಪ, ಮುಖ್ಯ ಶಿಕ್ಷಕ ಮೋಹನಕುಮಾರ್ ಪಾಲ್ಗೊಂಡಿದ್ದರು.
ಕಲ್ಕೆರೆ: ಗ್ರಾಮದ ಸರ್ಕಾರಿ ಶಾಲೆಯಲ್ಲಿ ಏರ್ಪಡಿಸಿದ್ದ `ಶಾಲೆಗಾಗಿ ನಾವು-ನೀವು~ ಕಾರ್ಯಕ್ರಮವನ್ನು ಎಸ್ಡಿಎಂಸಿ ಅಧ್ಯಕ್ಷ ಕೆ. ರಮೇಶ್ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸದಸ್ಯ ಅಪ್ರೋಜ್ ಉದ್ಘಾಟಿಸಿದರು.