ಬೆಳಗಾವಿ: ಗಡಿ ವಿವಾದ ಕುರಿತು ನ್ಯಾಯಾಲಯ ಹೊರಗಡೆ ಚರ್ಚೆಗೆ ಮಹಾರಾಷ್ಟ್ರ ಸಿದ್ಧವಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ ಹೇಳಿದರು.ಜಿಲ್ಲೆಯ ಚಿಕ್ಕೋಡಿಯಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾತನಾಡಿದ ಅವರು, ‘ಹಿಂದೆ ಎಲ್.ಕೆ. ಆಡ್ವಾಣಿ ಅವರು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಗಡಿ ವಿವಾದವನ್ನು ಚರ್ಚೆಯ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಮಾಡಿದ್ದರು. ಅದರಂತೆ ಕರ್ನಾಟಕ ಮುಖ್ಯಮಂತ್ರಿಗಳು ಸಿದ್ಧರಿದ್ದರೆ, ನಾವೂ ಸಿದ್ಧರಿದ್ದೇವೆ’ ಎಂದು ಹೇಳಿದರು. ‘ಕರ್ನಾಟಕ ಮತ್ತು ಮಹಾರಾಷ್ಟ್ರ ಬಾಂಧವ್ಯ ಸುಧಾರಣೆಗೆ ಅವಶ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಾಗುವುದು’ ಎಂದರು.
‘ಆಲಮಟ್ಟಿ ಜಲಾಶಯ ಹೆಚ್ಚಳಕ್ಕೆ ಮಹಾರಾಷ್ಟ್ರದ ವಿರೋಧವಿಲ್ಲ. ಇದರಿಂದ ಹಿಂದುಳಿದಿರುವ ಪಶ್ಚಿಮ ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕ ಅಭಿವೃದ್ಧಿಗೆ ಚಾಲನೆ ಸಿಗಲಿದೆ. ಆದರೆ ಹಿನ್ನೀರಿನಿಂದ ಮಹಾರಾಷ್ಟ್ರದ ಕೊಲ್ಲಾಪುರ ಹಾಗೂ ಸಾಂಗಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದರು.‘ಅಕ್ಕಲಕೋಟೆ, ಸೊಲ್ಲಾಪುರದಲ್ಲಿರುವ ಕನ್ನಡ ಶಾಲೆಗಳನ್ನು ಬಂದ್ ಮಾಡಿಲ್ಲ. ಆ ಶಾಲೆಗಳಿಗೆ ಪೂರ್ಣ ಸಹಕಾರ ನೀಡಲಾಗುತ್ತಿದೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪು ಬರುವವರೆಗೂ ಎರಡೂ ರಾಜ್ಯಗಳಲ್ಲಿರುವ ಭಾಷಾ ಅಲ್ಪಸಂಖ್ಯಾತರಿಗೆ ಸಿಗಬೇಕಾದ ಸೌಲಭ್ಯಗಳು ಸಿಗಬೇಕು. ಇದಕ್ಕೆ ಮಹಾರಾಷ್ಟವೂ ಬದ್ಧವಾಗಿದೆ’ ಎಂದು ಅವರು ಹೇಳಿದರು.