ಕಾರವಾರ: ಹಿಂದುಳಿದಿರುವ ಗಡಿ ಭಾಗದ ಅಭಿವೃದ್ಧಿಗೆ ವಿಶೇಷ ಯೋಜನೆ ಹಾಕಿಕೊಳ್ಳುವಂತೆ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರನ್ನು ಒತ್ತಾಯಿ ಸುವುದಾಗಿ ಮೀನುಗಾರಿಕೆ ಸಚಿವ ಆನಂದ ಅಸ್ನೋಟಿಕರ್ ಹೇಳಿದರು.
ತಾಲ್ಲೂಕಿನ ಸದಾಶಿವಗಡ ದೇವ ವಾಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಹಾಗೂ ಚಿತ್ತಾಕುಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ 16 ಕಿರಿಯ ಪ್ರಾಥಮಿಕ ಶಾಲೆಗಳ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಈ ಭಾಗದಲ್ಲಿ ಶೈಕ್ಷಣಿಕ ಬೆಳವಣಿಗೆ ಕುಂಠಿತವಾಗಿದ್ದು ಶಿಕ್ಷಣದ ವಾತಾವರಣ ನಿರ್ಮಿಸಲು ಅಗತ್ಯವಿರುವ ಕಡೆಗಳಲ್ಲಿ ಶಾಲೆಗಳನ್ನು ನಿರ್ಮಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದುವರಿದಿವೆ. ಅವರ ಹಾದಿಯಲ್ಲೇ ನಾವು ನಡೆಯಬೇಕಾಗಿ ಎಂದ ಅವರು, ಶಿಕ್ಷಣ ವನ್ನು ಪ್ರೋತ್ಸಾಹಿಸಲು ಅಗತ್ಯವಿರುವ ಎಲ್ಲ ನೆರವು ನೀಡಲಾಗುವುದು ಎಂದರು.
ಶತಮಾನೋತ್ಸವ ಸ್ಮರಣ ಸಂಚಿಕೆ ಯನ್ನು ಸಚಿವರು ಇದೇ ಸಂದರ್ಭದಲ್ಲಿ ಸಚಿವರು ಬಿಡುಗಡೆ ಮಾಡಿದರು. ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸಿದ ಸುಲೋಚನಾ ಕದಂ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಎಸ್.ಕುಮಾರ, ಕೆಡಿಎ ಅಧ್ಯಕ್ಷ ಆರ್.ಜಿ.ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಕಾಂತ ಹೆಗಡೆ, ಮಾಜಿ ಶಾಸಕ ಗಂಗಾಧರ ಭಟ್, ಸ್ವಾತಿ ನಾಯ್ಕ ವೇದಿಕೆಯಲ್ಲಿದ್ದರು.