ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರನ್ನು ಎರಡನೇ ಅವಧಿಗೂ ಅದೇ ಹುದ್ದೆಯಲ್ಲಿ ಮುಂದುವರಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ವಿಷಯ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಗಡ್ಕರಿ ಅವರನ್ನು ಮುಂದುವರಿಸುವ ಉದ್ದೇಶದಿಂದಲೇ ಪಕ್ಷದ ಸಂವಿಧಾನಕ್ಕೆ ತಿದ್ದುಪಡಿ ತರಲು ಬಿಜೆಪಿ ಮುಂದಾಗಿದೆ ಎನ್ನಲಾಗಿದೆ. ಇದೇ ವಾರ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಗಡ್ಕರಿ ಅವರನ್ನು ಮತ್ತೆ ಅಧ್ಯಕ್ಷರನ್ನಾಗಿ ಮುಂದುವರಿಸಲು ಅಗತ್ಯವಾದ ಸಂವಿಧಾನ ತಿದ್ದುಪಡಿಗೆ ಹಸಿರು ನಿಶಾನೆ ತೋರಿಸಲಾಗಿದೆ ಎನ್ನಲಾಗಿದೆ.
ರಾಷ್ಟ್ರಪತಿ ಚುನಾವಣೆ ಚರ್ಚೆ ಸಾಧ್ಯತೆ ಮುಂಬೈ (ಪಿಟಿಐ): ನಗರದಲ್ಲಿ ಇದೇ 24 ಮತ್ತು 25ರಂದು ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ `ರಾಷ್ಟ್ರಪತಿ ಚುನಾವಣೆ~ ಪ್ರಮುಖ ಚರ್ಚೆಯ ವಿಷಯವಾಗಲಿದೆ ಎಂದು ಪಕ್ಷದ ರಾಜ್ಯ ಘಟಕದ ವಕ್ತಾರ ಮಾಧವ್ ಭಂಡಾರಿ ತಿಳಿಸಿದ್ದಾರೆ. `ಈ ಬಾರಿಯ ರಾಷ್ಟ್ರಪತಿ ಚುನಾವಣೆ ಭಾರಿ ರಾಜಕೀಯ ಮಹತ್ವ ಪಡೆದುಕೊಂಡಿದ್ದು, ಪಕ್ಷ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಎರಡು ದಿನಗಳ ಕಾರ್ಯಕಾರಿಣಿಯಲ್ಲಿ ಚರ್ಚಿಸಲಾಗುವುದು. ಕೊನೆಯ ದಿನ ಸಾರ್ವಜನಿಕ ಸಭೆ ನಡೆಯಲಿದೆ~ ಎಂದು ಅವರು ಹೇಳಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸದಸ್ಯರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರ ಅಧಿಕಾರದ ಅವಧಿ ಡಿಸೆಂಬರ್ಗೆ ಪೂರ್ಣಗೊಳ್ಳಲಿದ್ದು, ಎರಡನೇ ಅವಧಿಗೆ ಅವರನ್ನು ಮುಂದುವರಿಸುವ ಅಥವಾ ಕೈಬಿಡುವ ಮಹತ್ವದ ನಿರ್ಧಾರವನ್ನೂ ಕಾರ್ಯಕಾರಿಣಿಯಲ್ಲಿ ತೆಗೆದುಕೊಳ್ಳುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. |
ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರ ಪಕ್ಷದ ಸಂವಿಧಾನಕ್ಕೆ ತಿದ್ದುಪಡಿ ಮಾಡಲಾಗುತ್ತದೆ. ಮುಂಬೈನಲ್ಲಿ ಇದೇ 24 ಮತ್ತು 25ರಂದು ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಈ ಪ್ರಸ್ತಾವಕ್ಕೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ಇದು ನಿಜವಾದಲ್ಲಿ, ಪಕ್ಷದ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ನಂತರ ಸತತ ಎರಡನೇ ಅವಧಿಗೆ ಬಿಜೆಪಿ ಅಧ್ಯಕ್ಷರಾದ ಹೆಗ್ಗಳಿಕೆಗೆ 55 ವರ್ಷದ ಗಡ್ಕರಿ ಪಾತ್ರರಾಗುತ್ತಾರೆ.
ಅಧ್ಯಕ್ಷರು ಸತತ ಎರಡನೇ ಅವಧಿಗೆ ಮುಂದುವರಿಯುವುದನ್ನು ತಪ್ಪಿಸುವ ಉದ್ದೇಶದಿಂದ ಈ ಹಿಂದೆ ಪಕ್ಷದ ಸಂವಿಧಾನಕ್ಕೆ ತಿದ್ದುಪಡಿ ತರುವ ಮೊದಲು, ಅಡ್ವಾಣಿ ಅವರಿಗೆ ಇಂತಹ ಅವಕಾಶ ಲಭ್ಯವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.