ಬಳ್ಳಾರಿ: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸಿಬಿಐ ಅಧಿಕಾರಿಗಳ ದಾಳಿ ವೇಳೆ ಕೂಡ್ಲಗಿ ಶಾಸಕ ಬಿ.ನಾಗೇಂದ್ರ ಅವರ ನಿವಾಸದಲ್ಲಿ ಗನ್ ಪತ್ತೆಯಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್ಐಆರ್ ದಾಖಲಿಸಲಾಗಿದೆ.
ನೆಹರೂ ನಗರದಲ್ಲಿರುವ ನಾಗೇಂದ್ರ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಗನ್ ಪತ್ತೆಯಾದ್ದರಿಂದ ಸಿಬಿಐ ಅಧಿಕಾರಿಗಳು ಈ ಕುರಿತು ಕ್ರಮಕೈಗೊಳ್ಳುವಂತೆ ಸ್ಥಳೀಯ ಪೊಲೀಸರಿಗೆ ಪತ್ರ ಬರೆದಿದ್ದರು.
ಈ ಕುರಿತು ಸ್ಥಳೀಯ ಪೊಲೀಸರು ವಿಚಾರಣೆ ನಡೆಸಿದಾಗ ಪತ್ತೆಯಾದ ಗನ್ ಶಾಸಕ ನಾಗೇಂದ್ರ ಅವರ ಅಂಗರಕ್ಷಕ ಪೇದೆ ಶಾಂತಮೂರ್ತಿ ಅವರಿಗೆ ಸೇರಿದ್ದು ಎಂದು ತಿಳಿದುಬಂದ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಪೇದೆ ಶಾಂತಮೂರ್ತಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಬಳ್ಳಾರಿ ಎಸ್ಪಿ ಡಾ. ಚಂದ್ರಗುಪ್ತ ತಿಳಿಸಿದ್ದಾರೆ.