ಚಿತ್ರದುರ್ಗ: ಜಿಲ್ಲಾ ಪಂಚಾಯ್ತಿ ನೂತನ ಅಧ್ಯಕ್ಷ, ಉಪಾಧ್ಯರ ಆಯ್ಕೆಗೆ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕೆಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ಮಾತುಕತೆಗಳು ಈಗ ತೀವ್ರಗೊಂಡಿವೆ.
ಎರಡನೇ ಅವಧಿಗೆ ಜಿ.ಪಂ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಸಾಮಾನ್ಯ ವರ್ಗಕ್ಕೆ ಸೇರಿದ ಏಕೈಕ ಮಹಿಳೆ ಕಾಂಗ್ರೆಸ್ನಲ್ಲಿದ್ದು, ಅವರೀಗ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಕುರಿತು ಆಡಳಿತರೂಢ ಕಾಂಗ್ರೆಸ್ ಪಕ್ಷ ಬುಧವಾರ ಸಭೆ ನಡೆಸಿ ಸದಸ್ಯರು, ಮುಖಂಡರ ಅಭಿಪ್ರಾಯ ಸಂಗ್ರಹಿಸಿತು. ಇಲ್ಲಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಎ. ಸೇತುರಾಮ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ, ಪಕ್ಷದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಕಾರ್ಯದರ್ಶಿ ಸತೀಶ್ ಕೆ. ಮಲ್ಲಣ್ಣ ವೀಕ್ಷಕರಾಗಿ ಭಾಗವಹಿಸಿದ್ದರು. ಮಾಜಿ ಸಂಸದ ಕೋದಂಡರಾಮಯ್ಯ, ಮಾಜಿ ಶಾಸಕ ಎಚ್. ಆಂಜನೇಯ, ಜಿ.ಎಸ್. ಮಂಜುನಾಥ್ ಹಾಜರಿದ್ದರು.
ಅಧ್ಯಕ್ಷ ಸ್ಥಾನಕ್ಕೆ ಸುಮಾರು 12 ಮಂದಿ ಮಹಿಳಾ ಸದಸ್ಯರ ಹೆಸರು ಪ್ರಸ್ತಾಪವಾಗಿದ್ದು, ಅಂತಿಮ ತೀರ್ಮಾನ ಕೈಗೊಂಡಿಲ್ಲ. ಕಾಂಗ್ರೆಸ್ ಸಂಪ್ರದಾಯದಂತೆ ಅಂತಿಮ ನಿರ್ಧಾರ ವರಿಷ್ಠರೇ ಕೈಗೊಳ್ಳಲಿದ್ದಾರೆ ಎಂದು ಮುಖಂಡರು ತಿಳಿಸಿದ್ದಾರೆ.
ಸಾಮಾಜಿಕ ನ್ಯಾಯ ಆಧಾರದ ಮೇಲೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆಯಬೇಕು ಮತ್ತು ಇದುವರೆಗೂ ಪ್ರಾತಿನಿಧ್ಯ ದೊರೆಯದ ಸಮುದಾಯಕ್ಕೆ ನೀಡಬೇಕು ಈ ಸ್ಥಾನಗಳನ್ನು ನೀಡಬೇಕು ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ.
ಅಧ್ಯಕ್ಷರಾಗಲು ಮಹಿಳಾ ಸದಸ್ಯರಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಆಯ್ಕೆ ಕಗ್ಗಂಟಾಗಿದೆ. ಇದರಿಂದಾಗಿ ಇನ್ನೊಂದು ಸುತ್ತಿನ ಮಾತುಕತೆ ನಡೆಯಲಿದೆ. ಉಪಾಧ್ಯಕ್ಷ ಸ್ಥಾನದ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ. ಎರಡು ಪಕ್ಷಗಳ ಮುಖಂಡರು ಚರ್ಚೆಯಲ್ಲಿ ತೊಡಗಿದ್ದಾರೆ.
ಗಂಥಾಲಯಕ್ಕೆ ಆಗ್ರಹ
ತಾಲ್ಲೂಕಿನ ತುರುವನೂರು ಹೋಬಳಿಯ ಹುಣಸೇಕಟ್ಟೆ ಗ್ರಾಮಕ್ಕೆ ಗ್ರಾಮೀಣ ಗಂಥಾಲಯ ಸೌಲಭ್ಯ ಮಂಜೂರು ಮಾಡಬೇಕು ಎಂದು ಗ್ರಾಮಸ್ಥರು ಇತ್ತೀಚೆಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಗ್ರಾಮದಲ್ಲಿ 500 ಮನೆಗಳಿದ್ದು, ವಿದ್ಯಾವಂತರು, ನಿರುದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನಾರ್ಜನೆಗೆ ಗ್ರಂಥಾಲಯ ಅನುಕೂಲವಾಗಲಿದೆ. ಕೂಡಲೇ ಜಿಲ್ಲಾಡಳಿತ ಇತ್ತ ಗಮನಹರಿಸಿ ಅನುಕೂಲ ಮಾಡಿಕೊಡಬೇಕು ಎಂದು ತಿಪ್ಪೇಸ್ವಾಮಿ, ಶಿವಮೂರ್ತಿ, ಕೆ.ಎಂ. ಕಾಂತರಾಜು, ಶಶಾಂಕ್, ಓಬಣ್ಣ, ಚಿನ್ನಪ್ಪ, ವಿಕಾಸ್, ಮಂಜಣ್ಣ, ರಘು, ಕಲ್ಲೇಶ್, ವಿಷ್ಣುಸ್ವಾಮಿ, ಸುದರ್ಶನ್, ಸಂಜಯ್ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.