ಪುತ್ತೂರು: `ಅಹಿಂಸಾ ಮಾರ್ಗದ ಮೂಲಕ ಈ ದೇಶವನ್ನು ಪರಕೀಯರ ದಾಸ್ಯದಿಂದ ಮುಕ್ತಗೊಳಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸ್ವಾವಲಂಬನೆ, ಗ್ರಾಮ ಸ್ವರಾಜ್ಯ ಹಾಗೂ ಸ್ವದೇಶಿ ಚಿಂತನೆಗಳು ಇಂದಿಗೂ ಪ್ರಸ್ತುತ. ಇಂದು ಭಾರತೀಯರ ಏಕತೆಯನ್ನು ಕಾಪಾಡುವಲ್ಲಿ ಗಾಂಧೀಜಿ ಅವರ ತತ್ವಾದರ್ಶಗಳು ಪ್ರೇರಕವಾಗಿವೆ~ ಎಂದು ಪುತ್ತೂರು ಶಾಸಕಿ ಮಲ್ಲಿಕಾ ಪ್ರಸಾದ್ ಹೇಳಿದರು.
ಪುತ್ತೂರಿನ ಪುರಭವನದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಶಂಭು ಭಟ್ ಮಾತನಾಡಿ, `ಗುಡಿ ಕೈಗಾರಿಕೆಗಳು ಮತ್ತು ಪಂಚಾಯತ್ ರಾಜ್ ವ್ಯವಸ್ಥೆ ಕುರಿತಂತೆ ಸ್ಪಷ್ಟ ಕಲ್ಪನೆಯನ್ನು ಹೊಂದಿದ್ದ ಗಾಂಧೀಜಿ ಅವರು ಹಳ್ಳಿಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಚಿಂತನೆ ಮಾಡಿದ್ದರು. ಅದನ್ನು ಸಪೂರ್ಣವಾಗಿ ಸಾಕಾರ ಗೊಳಿಸುವ ಕೆಲಸ ಆಗಬೇಕಿದೆ~ ಎಂದು ಅವರು ಹೇಳಿದರು.
ಅಧ್ಯಕ್ಷೆ ಕಮಲಾ ಆನಂದ ಅಧ್ಯಕ್ಷತೆ ವಹಿಸಿದ್ದರು. ತಹಶೀಲ್ದಾರ್ ಕುಳ್ಳೇಗೌಡ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಯಾನಂದ ಪೂಜಾರಿ, ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ.ಬಿ.ಜೆ. ಸುವರ್ಣ ಮತ್ತಿತರರು ಇದ್ದರು.