ಯಾದಗಿರಿ: ದೇಶದ ಸ್ವಾತಂತ್ರ್ಯಕ್ಕಾಗಿ ಅಹಿಂಸೆಯ ಮಾರ್ಗದಲ್ಲಿ ಹೋರಾಟ ಮಾಡಿದ ಮಹಾತ್ಮಾ ಗಾಂಧೀಜಿಯವರ ಆದರ್ಶವನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಫ್.ಆರ್ ಜಮಾದಾರ ಹೇಳಿದರು.
ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಗಾಂಧೀಜಿ ಜಯಂತಿ ಅಂಗವಾಗಿ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
ಮಹಾತ್ಮಾ ಗಾಂಧೀಜಿ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟು ಸ್ವಾತಂತ್ರ್ಯ ತಂದುಕೊಟ್ಟರು. ದೇಶದ ಜನತೆಗೆ ಒಳ್ಳೆಯ ಕಾರ್ಯಗಳ ಮೂಲಕ ಅಪಾರ ಕೊಡುಗೆ ನೀಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಯನ್ನು ಸ್ಮರಿಸುವುದು ಅತ್ಯವಶ್ಯಕ ಎಂದು ಹೇಳಿದರು.
ದೇಶದಲ್ಲಿ ಎಲ್ಲರೂ ಸೌಹಾರ್ದದಿಂದ ಬಾಳಬೇಕು. ಎಲ್ಲರೂ ಪ್ರೀತಿಯಿಂದ ಇರಲು ಸಹಕರಿಸಿದರು. ಇಂತಹ ಮಹಾನ್ ವ್ಯಕ್ತಿಯನ್ನು ಆದರ್ಶವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಕಲಾ ತಂಡದವರು ಪ್ರಾರ್ಥಿಸಿದರು. ಅಕೌಂಟ್ ಆಫೀಸರ್ ವೀರಣ್ಣ ಗೀತೆ ಹಾಡಿದರು. ಇದಕ್ಕೂ ಮುನ್ನಾ ಜಿಲ್ಲಾಧಿಕಾರಿಗಳು ಮಹಾತ್ಮಾ ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಜಹೀರಾ ನಸೀಮ್, ಸಹಾಯಕ ಆಯುಕ್ತ ಬಿ.ಪಿ. ವಿಜಯ, ತಹಸೀಲ್ದಾರ ಡಾ. ಶರಣಪ್ಪ ಸತ್ಯಂಪೇಟೆ, ವಾರ್ತಾ ಇಲಾಖೆ ಸಹಾಯಕ ಡಿ.ಕೆ.ರಾಜರತ್ನ, ಸಿಬ್ಬಂದಿ ಹಾಜರಿದ್ದರು. ಕಚೇರಿಯ ಸಹಾಯಕ ಮಲ್ಲಿಕಾರ್ಜುನ ರೆಡ್ಡಿ ವಂದಿಸಿದರು.