ಅಹಮದಾಬಾದ್(ಪಿಟಿಐ): ಗುಜರಾತ್ನ ಮುಖ್ಯಮಂತ್ರಿ ನರೇಂದ್ರಮೋದಿ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನೀಡಿದ್ದ `ಗುಜರಾತ್ ಬಂದ್' ಕರೆಗೆ ಶುಕ್ರವಾರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ವೇಳೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ 600ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
ಈವರೆಗೆ ಎಲ್ಲಿಯೂ ಹಿಂಸಾಚಾರ ಅಥವಾ ಅಹಿತಕರ ಘಟನೆ ನಡೆದ ವರದಿಯಾಗಿಲ್ಲ. ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಪ್ರತಿಭಟನೆ ವೇಳೆ ರಸ್ತೆತಡೆ, ರೈಲುತಡೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ತಡೆದರು.
ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೆಚ್ಚಿನ ಬಿಗಿ ಬಂದೊಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಗಾಗಿ 60 ಸಾವಿರ ಪೊಲೀಸರು ಹಾಗೂ ಇತರ ಭದ್ರತಾ ಸಿಬ್ಬಂದಿ ನಿಯೋಜಿಸಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
24 ರಾಜ್ಯ ಮೀಸಲು ಪೊಲೀಸ್ ಪಡೆ(ಎಸ್ಆರ್ಪಿಎಫ್), ಆರು ಕ್ಷಿಪ್ರ ಕಾರ್ಯ ಪಡೆ(ಆರ್ಎಎಫ್) ಭದ್ರತೆಗಾಗಿ ನಿಯೋಜನೆಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.