ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಗುಡಿಸಲು ವಾಸಿಗಳಿಗೆ ಹಕ್ಕುಪತ್ರ ನೀಡಿ'

Last Updated 19 ಡಿಸೆಂಬರ್ 2012, 11:19 IST
ಅಕ್ಷರ ಗಾತ್ರ

ಗೌರಿಬಿದನೂರು: `ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ನಿವೇಶನ ರಹಿತ ಫಲಾನುಭವಿಗಳಿಗೆ ನಿವೇಶನಗಳನ್ನು ನೀಡಬೇಕೆಂದು ಆಗ್ರಹಿಸಿ 20 ಸಾವಿರಕ್ಕೂ ಹೆಚ್ಚು ಅರ್ಹ ಫಲಾನುಭವಿಗಳು ಆಯಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿ ಸಲ್ಲಸಿದ್ದಾರೆ.

ಆದರೆ ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ವಿಫಲವಾಗಿವೆ ಎಂದು ಸಿಪಿಎಂ ರಾಜ್ಯ ಘಟಕದ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ ಅಸಮಧಾನ ವ್ಯಕ್ತಪಡಿಸಿದರು.

ತಾಲ್ಲೂಕಿನ ಕಾದಲವೇಣಿ  ಗ್ರಾಮದ ಹೊರವಲಯದಲ್ಲಿ ಸಿಪಿಎಂ ಮುಖಂಡರ ನೇತೃತ್ವದಲ್ಲಿ ಸರ್ಕಾರಿ ಜಮೀನಿನಲ್ಲಿ ಗುಡಿಸಲು ಕಟ್ಟಿಕೊಂಡಿರುವವರನ್ನು ಮಂಗಳವಾರ ಭೇಟಿ ಮಾಡಿ ಮಾತನಾಡಿದ ಅವರು, `ಜಿಲ್ಲೆಯಲ್ಲಿ ಭೂಮಾಫಿಯ ಕಳ್ಳರು 10ಸಾವಿರ ಎಕರೆಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ' ಎಂದರು.

`ಅಕ್ರಮವಾಗಿ ಭೂಮಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಜಿಲ್ಲಾಡಳಿತ ಕ್ರಮ ಜರುಗಿಸಲಾಗಿಲ್ಲ. ಒತ್ತುವರಿಯನ್ನು ತೆರವುಗೊಳಿಸಲು ಕೂಡ ಸಾಧ್ಯವಾಗಿಲ್ಲ. ಆದರೆ ಸರ್ಕಾರಿ ಜಮೀನಿನಲ್ಲಿ ಗುಡಿಸಲು ಕಟ್ಟಿಸಿಕೊಂಡಿರುವವರನ್ನು ತೆರವುಗೊಳಿಸುವುದಾಗಿ ತಾಲ್ಲೂಕು ಆಡಳಿತ ಎಚ್ಚರಿಕೆ ನೀಡುತ್ತಿದೆ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

`ನಿವೇಶನ ಮತ್ತು ವಸತಿ ಸೌಲಭ್ಯ ಕಲ್ಪಿಸುವಂತೆ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಜಿಲ್ಲಾಡಳಿತ ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ಫಲಾನುಭವಿಗಳು ಸರ್ಕಾರಿ ಜಮೀನಿನಲ್ಲಿ ಗುಡಿಸಲುಗಳನ್ನು ಕಟ್ಟಿಕೊಂಡಿದ್ದಾರೆ. ದಿನನಿತ್ಯವೂ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಇರುವಂತಹ  ಗುಡಿಸಲುಗಳಿಗೆ ತಾತ್ಕಲಿಕವಾಗಿ ಯಾವುದೇ ತರಹದ ಸೌಲಭ್ಯ ಕಲ್ಪಿಸಿಕೊಟ್ಟಿಲ್ಲ. ಜಿಲ್ಲಾಡಳಿತ ಈಗಲಾದರೂ ಎಚ್ಚೆತ್ತುಕೊಂಡು ನಿವೇಶನ, ವಸತಿ ಸೌಲಭ್ಯ ಕಲ್ಪಿಸಬೇಕು. ಮುಂದಿನ ದಿನಗಳಲ್ಲಿ ಇತರ ಗ್ರಾಮಗಳಲ್ಲಿನ ಸರ್ಕಾರಿ ಜಮೀನುಗಳಲ್ಲಿ ಇದೇ ರೀತಿ ಗುಡಿಸಲುಗಳನ್ನು ನಿರ್ಮಿಸಿಕೊಳ್ಳಲಾಗುವುದು. ಗುಡಿಸಲುನಿವಾಸಿಗಳಿಗೆ ತಕ್ಷಣವೇ ಹಕ್ಕುಪತ್ರಗಳನ್ನು ವಿತರಿಸಬೇಕು' ಎಂದು ಅವರು ಆಗ್ರಹಿಸಿದರು. 

`ಸರ್ಕಾರ ವಸತಿ ಯೋಜನೆ ರೂಪಿಸಿರುವುದು ಅವೈಜ್ಞಾನಿಕ ಕ್ರಮ. ಆಶ್ರಯ ಮನೆಗಳಿಗೆ ನೀಡುವ 12-22 ಅಡಿಗಳ ನಿವೇಶನದಲ್ಲಿ  ಶೌಚಾಲಯ, ಸ್ನಾನದ ಮನೆ ಮಾಡಿಕೊಳ್ಳಲು ಹೇಗೆ ಸಾಧ್ಯ? ಗ್ರಾಮೀಣ ಪ್ರದೇಶಗಳಲ್ಲಿ ಆಶ್ರಯ ಯೋಜನೆಯಲ್ಲಿ ಕನಿಷ್ಟ 20-30ಅಡಿಗಳ ನಿವೇಶನ ನೀಡಬೇಕು.

ಈಗ ನೀಡಲಾಗುತ್ತಿರುವ 70 ಸಾವಿರ ರೂಪಾಯಿ ಅನುದಾನದಲ್ಲಿ ಉತ್ತಮ ಮನೆಗಳನ್ನು ಹೇಗೆ ನಿರ್ಮಿಸಿಕೊಳ್ಳಬಹುದು' ಎಂದು ಅವರು ಪ್ರಶ್ನಿಸಿದರು.  ಸಿಪಿಎಂ  ತಾಲ್ಲೂಕು ಘಟಕದ ಕಾರ್ಯದರ್ಶಿ ಸಿ.ಸಿ.ಅಶ್ವತ್ಥಪ್ಪ, ಪ್ರಾಂತ ರೈತ ಸಂಘದ ಅಧ್ಯಕ್ಷ ರವಿಚಂದ್ರರೆಡ್ಡಿ, ಮುಖಂಡರಾದ ಸಿದ್ದಗಂಗಪ್ಪ, ತಿಪ್ಪಣ್ಣ, ಶ್ರೀನಿವಾಸ್, ನಾಗರತ್ನಮ್ಮ, ಅನ್ವರ್‌ಬಾಷಾ, ಬಾಷಾ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT