ಬಾಗೇಪಲ್ಲಿ: ಪರಿಶಿಷ್ಟ ಜಾತಿ ಹಾಗೂ ಪಂಗಡ ದವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಹಲವು ಯೋಜನೆಗಳು ಜಾರಿಯಾಗಿವೆ. ಆದರೆ ಶಿಕ್ಷಣಕ್ಕೆ ಮನ್ನಣೆ ದೊರಕುತ್ತಿಲ್ಲ. ಕೂಡಲೇ ಗುಣಾತ್ಮಕ ಶಿಕ್ಷಣ ನೀಡುವತ್ತ ಸಮುದಾಯದ ಮುಖಂಡರು ಚಿಂತಿಸಬೇಕು ಎಂದು ಸಚಿವ ಎಂ.ವೀರಪ್ಪ ಮೊಯಿಲಿ ಸಲಹೆ ನೀಡಿದರು.
ಪಟ್ಟಣದಲ್ಲಿ ತಾಲ್ಲೂಕು ಭೋವಿ ಸಂಘದ ವತಿಯಿಂದ ಸೋಮವಾರ ನಡೆದ ಶರಣ ಸಿದ್ದರಾಮೇಶ್ವರ 839 ನೇ ಜಯಂತ್ಯುತ್ಸವದಲ್ಲಿ ಮಾತನಾಡಿದರು.
ಭೋವಿ ಸಮುದಾಯದ ಪಕ್ಷೇತರ ಶಾಸಕರ ಬಲದಿಂದ ಸರ್ಕಾರ ನಡೆಯಬೇಕಾಗಿದೆ. ಅದು ಕಾಂಗ್ರೆಸ್ ಸರ್ಕಾರಕ್ಕೆ ಸಿಗಲಿಲ್ಲ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಿಕ್ಕೆ ಬರುವುದು. ಆಗ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಹಾಲಿ ಶಾಸಕರಾದ ಎನ್.ಸಂಪಂಗಿ, ವೆಂಕಟಸ್ವಾಮಿ, ಶಿವಶಂಕರರೆಡ್ಡಿ ಹಾಗೂ ಸುಧಾಕರ್ ಅವರಿಗೆ ಟಿಕೇಟು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಮುಖಂಡರು ಕ್ಷೇತ್ರದ ಜನತೆಯೊಂದಿಗೆ ಉತ್ತಮ ಬಾಂಧವ್ಯ ಹೊಂದಬೇಕಾಗಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನತೆ ಏಳಿಗೆಗಾಗಿ ಸರ್ಕಾರದಿಂದ ಮತ್ತಷ್ಟು ಕಾರ್ಯ ಯೋಜನೆಗಳನ್ನು ರೂಪಿಸಲಾಗುವುದು. ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ನೀಡುವುದರ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕಾಗಿದೆ ಎಂದು ಹೇಳಿದರು.
ಮಾಜಿ ಸಚಿವ ವೆಂಕಟರಮಣಪ್ಪ ಮಾತನಾಡಿ ಭೋವಿ ಸಮುದಾಯದ ಜನತೆ ಸಂಘಟಿತರಾಗಿ, ಮುಂದಿನ ಚುನಾವಣೆಯಲ್ಲಿ ಭೋವಿ ಶಾಸಕರ ಸಂಖ್ಯೆ ಹೆಚ್ಚಾಗಲು ಸಮುದಾಯ ಜನತೆ ಸಹ ಕರಿಸಬೇಕು. ಪಕ್ಷೇತರ ಬೆಂಬಲ ಪಡೆದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೊನೆಯಲ್ಲಿ ಶಾಸಕರನ್ನು ದೂರವಿಟ್ಟರು ಎಂದು ಆಕ್ರೋಶ ಭರಿತರಾಗಿ ಹೇಳಿದರು.
ಇದಕ್ಕೂ ಮುನ್ನ ಸಿದ್ದರಾಮೇಶ್ವರ ಸ್ವಾಮಿ ಮೆರವಣಿಗೆ ಪಟ್ಟಣದ ಮುಖ್ಯರಸ್ತೆಗಳಲ್ಲಿ ಕಲಾ ತಂಡಗಳೊಂದಿಗೆ ನಡೆಯಿತು. ಭೋವಿ ಗುರು ಪೀಠ ಸಿದ್ದರಾಮೇಶ್ವರ ಸ್ವಾಮಿ ಸಾನಿಧ್ಯ ವಹಿಸಿದ್ದರು. ಶಾಸಕ ಎನ್.ಸಂಪಂಗಿ, ಶಿವಶಂಕರ ರೆಡ್ಡಿ, ವೆಂಕಟಸ್ವಾಮಿ, ಜಿ.ಪಂ.ಅಧ್ಯಕ್ಷ ಎಂ.ವಿ. ಕೃಷ್ಣಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷೆ ಅಮರಾವತಿ, ಸದಸ್ಯ ಹರಿನಾಥರೆಡ್ಡಿ, ಪುರಸಭಾ ಅಧ್ಯಕ್ಷೆ ಸುಜಾತಮ್ಮ ಕೋಲಾರ ಜಿಲ್ಲಾ ಪಂಚಾ ಯಿತಿ ಮಾಜಿ ಅಧ್ಯಕ್ಷೆ ಮಂಗಮ್ಮ, ಭೋವಿ ಮುಖಂಡ ರವಿಮಾಕಳೆ, ವೆಂಕಟಮುನಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.