ಗುಲ್ಬರ್ಗ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಆಸ್ಪತ್ರೆಯಲ್ಲಿ ವರ್ಷದುದ್ದಕ್ಕೂ ನಿರಂತರ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವ ಯೋಜನೆಗೆ ಶುಕ್ರವಾರ ಚಾಲನೆ ನೀಡಲಾಯಿತು.
ಯೋಜನೆಯನ್ನು ಉದ್ಘಾಟಿಸಿದ ಪ್ರಾದೇಶಿಕ ಆಯುಕ್ತ ಡಾ. ರಜನೀಶ ಗೋಯಲ್, “ಬಸವೇಶ್ವರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ಸೌಲಭ್ಯ ಕಲ್ಪಿಸಿರುವ ಎಚ್ಕೆಇ ಸಂಸ್ಥೆ ನಿರ್ಧಾರ ಶ್ಲಾಘನೀಯ” ಎಂದು ಹೇಳಿದರು.
“ಹೈದರಾಬಾದ ಕರ್ನಾಟಕ ಭಾಗದಲ್ಲಿ ವೈದ್ಯಕೀಯ ಸೌಲಭ್ಯ ಚೆನ್ನಾಗಿಲ್ಲ. ಹೀಗಾಗಿಯೇ ರೋಗಿಗಳು ಸೋಲಾಪುರಕ್ಕೆ ಹೋಗುತ್ತಾರೆ ಎಂಬ ಅಭಿಪ್ರಾಯವಿದೆ. ಪ್ರಸ್ತುತ ಉಚಿತ ವೈದ್ಯಕೀಯ ಸೇವೆ ಒದಗಿಸುತ್ತಿರುವ ಬಸವೇಶ್ವರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರಕಲಿ” ಎಂದು ಸಲಹೆ ಮಾಡಿದರು.
ಶ್ರೀಸಾಮಾನ್ಯನಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೇವೆ ಲಭ್ಯವಾಗಬೇಕು ಎನ್ನುವ ಉದ್ದೇಶದಿಂದ ಆಸ್ಪತ್ರೆಯಲ್ಲಿ ಚಿಕಿತ್ಸಾ ವೆಚ್ಚವನ್ನು ರೋಗಿಗಳಿಗೆ ಹೊರೆಯಾಗದಂತೆ ನಿಗದಿ ಮಾಡಲಾಗಿದೆ. ಹೈದರಾಬಾದ್ ಕರ್ನಾಟಕ ಅದರಲ್ಲೂ ವಿಶೇಷವಾಗಿ ಗುಲ್ಬರ್ಗ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳ ಜನರಿಗೆ ಪ್ರಯೋಜನ ನೀಡಲು ಈ ಸೇವೆ ಆರಂಭಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಶಶೀಲ ನಮೋಶಿ ತಿಳಿಸಿದರು.
ವೈದ್ಯಕೀಯ ಸೇವೆಗಳ ಕುರಿತ ವಿವರದ ಕೈಪಿಡಿಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಮಾಲಾಶ್ರೀ ಕಣವಿ ವಚನ ಗಾಯನ ಮಾಡಿದರು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ಎ.ವಿ.ದೇಶಮುಖ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಎಸ್.ಹಿರೇಮಠ ನಿರೂಪಿಸಿದರು.