ಕೋಲಾರ: ಬಯಲು ಸೀಮೆ ಜಿಲ್ಲೆಗಳಿಗಾಗಿ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸುವಲ್ಲಿ ಕೆಲವು ಗೊಂದಲ ಏರ್ಪಟ್ಟಿವೆ. ಅವುಗಳ ನಿವಾರಣೆಗೆ ಕೂಡಲೇ ಉನ್ನತ ಸಭೆಯೊಂದನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತಾಲ್ಲೂಕಿನ ವೇಮಗಲ್ನ ಕ್ರೀಡಾ ಮೈದಾನದಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಚಾಲನೆ ನೀಡಿ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆ ಮತ್ತು ಪರಮಶಿವಯ್ಯ ಅವರ ವರದಿಯನ್ನು ಆಧರಿಸಿದ ಯೋಜನೆಯ ಕುರಿತು ಗೊಂದಲ ನಿರ್ಮಾಣವಾಗಿದೆ.
ಗೊಂದಲ ನಿವಾರಣೆಗೆ ಹಲವು ಸಭೆಗಳೂ ನಡೆದಿವೆ. ಆದರೂ ಮತ್ತೊಮ್ಮೆ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ತಜ್ಞರ ಸಭೆ ನಡೆಸ-ಲಾಗುವುದು. ಸಭೆಯಲ್ಲಿ ಮೂಡುವ ಸಲಹೆಗಳನ್ನು ಸ್ವೀಕರಿಸಿ ಗೊಂದಲ ನಿವಾರಿಸಲಾಗುವುದು ಎಂದರು.
ಎತ್ತಿನ ಹೊಳೆ ಯೋಜನೆಯ ಜಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಟೆಂಡರ್ ಕರೆದಾಗಿದೆ. ಪರಮಶಿವಯ್ಯ ವರದಿ ಆಧರಿಸಿದ ಯೋಜನೆಯ ಸಮಗ್ರ ಯೋಜನಾ ವರದಿಯನ್ನು ತಯಾರಿ-ಸಲು `50 ಕೋಟಿ ಮೀಸಲಿರಿಸಲಾಗಿದೆ. ವರದಿ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಕುಡಿಯುವ ನೀರು ಬೇಕು. ಕೆರೆಗಳು ತುಂಬಬೇಕು ಮತ್ತು ಕೃಷಿಗೆ ಬೇಕಾಗುವಷ್ಟು ನೀರು ಬೇಕು ಎಂಬುದು ಜಿಲ್ಲೆಯ ಜನರ ಒತ್ತಾಯ. ತಮ್ಮ ವರದಿಯನ್ನು ಜಾರಿಗೊಳಿಸಿದರೆ ಈ ಎಲ್ಲವೂ ಸಾಧ್ಯ ಎನ್ನುತ್ತಾರೆ ಪರಮಶಿವಯ್ಯ. ಈ ನಿಟ್ಟಿನಲ್ಲಿ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು.
ಮರಳು ನೀತಿ: ರಾಜ್ಯದಲ್ಲಿ ಸ್ಪಷ್ಟ ಮರಳು ನೀತಿ ಇಲ್ಲದೆ ಮರಳು ಲೂಟಿ ನಡೆಯುತ್ತಿದೆ. ಅದನ್ನು ತಪ್ಪಿಸಲೆಂದೇ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ. ಲೋಕೋಪಯೋಗಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಉಪಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿ ವರದಿ ನೀಡಿದ ಬಳಿಕ ಮರಳು ನೀತಿ ಜಾರಿಗೆ ಬರಲಿದೆ. ಅಲ್ಲಿಯವರೆಗೂ ಮರಳು ಅಕ್ರಮ ದಂಧೆಯನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಡೆಯಬೇಕು ಎಂದು ಸೂಚಿಸಲಾಗಿದೆ. ಆದರೂ ಲೂಟಿ ಮುಂದುವರಿದರೆ ಈ ಇಬ್ಬರನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಎಚ್ಚರಿಸಿದರು.
ಹಾಲಿಗೆ ಮಾರುಕಟ್ಟೆ: ಜಿಲ್ಲೆಯಲ್ಲಿ ಪ್ರತಿ ದಿನ 8.64 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೆಂಗಳೂರಿ-ನಲ್ಲಿ ಕೇವಲ 2.23 ಲಕ್ಷ ಲೀಟರ್ ಹಾಲು ಮಾರಲು ಮಾತ್ರ ಅವಕಾಶ ನೀಡಿರುವುದು ಸಮಸ್ಯೆಯಾಗಿದೆ ಎಂದು ಕೋಲಾರ ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಮನವಿ ಸಲ್ಲಿಸಿದೆ. ಮಂಡ್ಯ, ತುಮಕೂರು, ಕೋಲಾರ ಮತ್ತು ಬೆಂಗಳೂರು ಒಕ್ಕೂಟಗಳ ನಡುವಿನ ಒಪ್ಪಂದದಂತೆ ಇದು ನಡೆಯುತ್ತಿದೆ. ಈ ಒಕ್ಕೂಟಗಳ ಸಭೆ ನಡೆಸಿ, ಕೋಲಾರ ಒಕ್ಕೂಟಕ್ಕೆ ಬೆಂಗಳೂರಿನಲ್ಲಿ ಕನಿಷ್ಠ 5 ಲಕ್ಷ ಲೀಟರ್ ಹಾಲು ಮಾರಲು ಅನುವು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.
ಹಾಲು ಪುಡಿ ಘಟಕ: ಚಿಕ್ಕಬಳ್ಳಾಪುರದಲ್ಲಿ ಹಾಲಿನ ಪುಡಿ ತಯಾರಿಸುವ ಘಟಕ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಈ ವರ್ಷ ಮೈಸೂರಿಗೂ ಘಟಕವನ್ನು ಮಂಜೂರು ಮಾಡಲಾಗಿದೆ. ಅಗತ್ಯ ಕಂಡುಬಂದರೆ ಮುಂದಿನ ವರ್ಷ ಕೋಲಾರ ಜಿಲ್ಲೆಯಲ್ಲೂ ಘಟಕ ಸ್ಥಾಪನೆಗೆ ಪ್ರಯತ್ನ ಮಾಡಲಾಗುವುದು ಎಂದರು.
ಉದ್ಯೋಗ: ಸ್ಥಳೀಯರಿಗೆ ಉದ್ಯೋಗ ನೀಡದೆ ಕೈಗಾರಿಕೆಗಳನ್ನು ಸ್ಥಾಪಿಸುವುದರಿಂದ ಪ್ರಯೋಜನವಿಲ್ಲ. 666 ಎಕರೆಯಲ್ಲಿ ಕೈಗಾರಿಕಾ ಪ್ರದೇಶ ಸ್ಥಾಪನೆಯಾಗಿ, `700 ಕೋಟಿ ಬಂಡವಾಳ ಹೂಡಿಕೆಯಾಗುತ್ತಿರುವ ಜಿಲ್ಲೆಯಲ್ಲಿ ಸ್ಥಳೀಯರಿಗೆ ಉದ್ಯೋಗ ಕೊಡಲೇಬೇಕು. ಸ್ಥಳೀಯರಿಗೆ ಉದ್ಯೋಗ ನೀಡಲೇಬೇಕು ಎಂಬ ನಿಬಂಧನೆಯನ್ನು ಕೈಗಾರಿಕೆಗಳಿಗೆ ವಿಧಿಸಬೇಕು. ಅದರ ಸಮರ್ಪಕ ಜಾರಿಗೆ ಉಸ್ತುವಾರಿ ಹೊರಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ವೈದ್ಯಕೀಯ ಕಾಲೇಜು: ಮುಂದಿನ ವರ್ಷ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜೊಂದನ್ನು ಮಂಜೂರು ಮಾಡಲಾಗುವುದು. ಕಾಲೇಜು ಸ್ಥಾಪನೆಯಾಗುವುದರಿಂದ ಉತ್ತಮ ಆಸ್ಪತ್ರೆ ಸೌಲಭ್ಯವೂ ಜನರಿಗೆ ದೊರಕುತ್ತದೆ. ವೈದ್ಯರ ಸೇವೆಯೂ ಲಭ್ಯವಾಗುತ್ತದೆ ಎಂದು ಹೇಳಿದರು.
ಸಮಾಜ ಕಲ್ಯಾಣ: ಸಮಾಜ ಕಲ್ಯಾಣ ಇಲಾಖೆ ಮತ್ತು ಪಶುಪಾಲನಾ ಇಲಾಖೆಯಲ್ಲಿರುವ ಸಮಸ್ಯೆಗಳು ಹಿಂದಿನ ಬಿಜೆಪಿ ಸರ್ಕಾರದ ಬಳುವಳಿಗಳೇ ಆಗಿವೆ ಎಂದು ಅವರು ಅಭಿಪ್ರಾಯಪಟ್ಟರು.
ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ, ಸಚಿವರಾದ ವಿನಯಕುಮಾರ್ ಸೊರಕೆ, ಕೃಷ್ಣ ಬೈರೇಗೌಡ, ಶಾಸಕರಾದ ಕೆ.ಆರ್.ರಮೇಶಕುಮಾರ್, ಆರ್.ವರ್ತೂರು ಪ್ರಕಾಶ್, ಕೆ.ಎಸ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್.ವೀರಯ್ಯ, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಮಾತನಾಡಿದರು. ಉಸ್ತುವಾರಿ ಸಚಿವ ಯು.ಟಿ.ಖಾದರ್ ಪ್ರಾಸ್ತಾವಿಕ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹ್ಮದ್, ವೈ.ಎ.ನಾರಾಯಣಸ್ವಾಮಿ, ಶಾಸಕರಾದ ವೈ.ರಾಮಕ್ಕ, ಎಸ್.ಎನ್.ನಾರಾಯಣಸ್ವಾಮಿ ಮತ್ತು ಡಾ.ಜಿ.ಮಂಜುನಾಥ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಆರ್.ನಾರಾಯಣಸ್ವಾಮಿ ವೇದಿಕೆಯಲ್ಲಿದ್ದರು.
ಜಿಲ್ಲಾಧಿಕಾರಿ ಡಿ.ಕೆ.ರವಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಎಂ.ಝುಲ್ಫಿಕರ್ ಉಲ್ಲಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.