ಬೆಂಗಳೂರು: ವಕೀಲರಾದ ವಿನೋದ್ಕುಮಾರ್ ಸಲ್ಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿದಂತೆ ಜಂತಕಲ್ ಗಣಿ ಕಂಪೆನಿ ಮಾಲೀಕ ವಿನೋದ್ ಗೋಯಲ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 17ಕ್ಕೆ ಮುಂದೂಡಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯ, ಮುಂದಿನ ವಿಚಾರಣೆ ವೇಳೆ ಆರೋಪಿಯ ಕಡ್ಡಾಯ ಖುದ್ದು ಹಾಜರಿಗೆ ಆದೇಶಿಸಿದೆ.
`ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಶುಕ್ರವಾರ ವಿಚಾರಣೆ ಆರಂಭಿಸುತ್ತಿದ್ದಂತೆ ಗೋಯಲ್ ಪರ ವಕೀಲರು ಖುದ್ದು ಹಾಜರಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದರು. ಹಿಂದಿನ ವಿಚಾರಣೆ ವೇಳೆ ದಿನದಮಟ್ಟಿಗೆ ಮಾತ್ರ ವಿನಾಯಿತಿ ಪಡೆದಿದ್ದ ಆರೋಪಿ ಮತ್ತೆ ಅರ್ಜಿ ಸಲ್ಲಿಸಿರುವುದಕ್ಕೆ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
`ಗೋಯಲ್ ಅವರಿಗೆ ಆರೋಗ್ಯ ತೀರಾ ಹದಗೆಟ್ಟಿದೆ. ಎದ್ದು ನಿಲ್ಲಲಾಗದ ಸ್ಥಿತಿಯಲ್ಲಿ ಇದ್ದಾರೆ. ಈಗ ಅವರನ್ನು ಗಾಲಿಕುರ್ಚಿಯಲ್ಲಿ ಕರೆತರಬೇಕಾಗುತ್ತದೆ~ ಎಂದು ವಕೀಲರು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿದ್ದರು.
ಆರೋಪಿಯ ಅರ್ಜಿಯ ಬಗ್ಗೆ ಅಸಮಾಧಾನ ಹೊರಹಾಕಿದ ನ್ಯಾಯಾಧೀಶರು, ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಿ ಕಡ್ಡಾಯ ಎಂದರು.