ಡಾರ್ಜಿಲಿಂಗ್ (ಪಿಟಿಐ): ಗೋರ್ಖಾಲ್ಯಾಂಡ್ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲ 45 ಸ್ಥಾನಗಳನ್ನು ಗೆದ್ದ ಜಾರ್ಖಂಡ್ ಮುಕ್ತಿಮೋರ್ಚಾ (ಜೆಜಿಎಂ) ಸದಸ್ಯರು ಶನಿವಾರ ಪ್ರಮಾಣವಚನ ಸ್ವೀಕರಿಸಿ ಗುಡ್ಡಗಾಡು ರಾಜ್ಯದ ಆಡಳಿತದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದರು.
ಹೊಸದಾಗಿ ಅಸ್ತಿತ್ವಕ್ಕೆ ಬಂದ ಸ್ವಾಯತ್ತ ಗೋರ್ಖಾಲ್ಯಾಂಡ್ ಅಭಿವೃದ್ಧಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ ಸಮಾರಂಭದಲ್ಲಿ ಭಾಗವಹಿಸಿದ್ದ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ, ಒಳ್ಳೆಯ ಆಡಳಿತ ನೀಡಿದಲ್ಲಿ ಇನ್ನೂ ಹೆಚ್ಚಿನ ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಗುಡ್ಡಗಾಡು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಹೇಳಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಹೊಸ ವಿಶ್ವವಿದ್ಯಾಲಯ ಸ್ಥಾಪನೆಯ ಭರವಸೆ ನೀಡಿದರು. ಸಣ್ಣ ಕೈಗಾರಿಕೆ ಸ್ಥಾಪನೆ, ಉದ್ಯೋಗ ಅವಕಾಶ, ಉತ್ತಮ ಗುಣಮಟ್ಟದ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡುವ ಮೂಲಕ ದಾರ್ಜಿಲಿಂಗ್ ಅನ್ನು ಸಿಟ್ಜರ್ಲೆಂಡ್ ಮಾದರಿಯಲ್ಲಿ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವಂತೆ ಸಲಹೆ ಮಾಡಿದರು.