ಪಣಜಿ (ಪಿಟಿಐ): ಸ್ಥಳೀಯ ಸಂಸ್ಕೃತಿ ರಕ್ಷಣೆ ಹಾಗೂ ಆರ್ಥಿಕ ನೆರವು ನೀಡುವ ಮೂಲಕ ಗೋವಾ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಸೋಮವಾರ ವಿಧಾನಸಭೆಗೆ ತಿಳಿಸಿದರು.
`ಸಂಸ್ಕೃತಿ ರಕ್ಷಣೆಗಾಗಿ ಈಶಾನ್ಯ ರಾಜ್ಯಗಳಿಗೆ ನೀಡಿರುವಂತಹ ಆರ್ಥಿಕ ನೆರವನ್ನು ನಮ್ಮ ರಾಜ್ಯಕ್ಕೂ ನೀಡಬೇಕು. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಹಿಂದೊಮ್ಮೆ ಮನವಿ ಸಲ್ಲಿಸಿದ್ದೆವು. ಅಂದಿನ ಹಣಕಾಸು ಸಚಿವ ಪ್ರಣವ್ ಮುಖರ್ಜಿಯವರು ಮನವಿಯನ್ನು ತಿರಸ್ಕರಿಸಿದ್ದರು.
ಈಗ ಹೊಸ ಹಣಕಾಸು ಸಚಿವರೆದುರು ಇದೇ ಮನವಿಯನ್ನು ಸಲ್ಲಿಸುತ್ತೇವೆ. ಬಹುಶಃ ನೂತನ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸುವ ಪ್ರಣವ್ ಮುಖರ್ಜಿಯವರು, ನಮ್ಮ ಕೆಲಸಕ್ಕೆ ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂಬ ನಂಬಿಕೆ ಇದೆ~ ಎಂದು ಪರಿಕ್ಕರ್ ಹೇಳಿದ್ದಾರೆ.