ನವದೆಹಲಿ (ಪಿಟಿಐ): ದೇಶದ ಎರಡೂ ಪ್ರಮುಖ ರಾಜಕೀಯ ಪಕ್ಷಗಳು ಸಾಮಾಜಿಕ ಜಾಲತಾಣ ಕಂಪೆನಿಗಳಿಗೆ ಹಣ ಪಾವತಿ ಮಾಡಿರುವುದರ ಕುರಿತು ಪರಿಶೀಲನೆ ನಡೆಸುವಂತೆ ಆರ್ಬಿಐಗೆ ನಿರ್ದೇಶನ ನೀಡುವಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಮಾಜಿ ಪ್ರಚಾರಕ ಕೆ.ಎನ್. ಗೋವಿಂದಾಚಾರ್ಯ ಅವರು ಚುನಾವಣಾ ಆಯೋಗವನ್ನು ಆಗ್ರಹಿಸಿದ್ದಾರೆ.
‘ಕೆಲವು ಮಂದಿ ಪ್ರಚಾರಕ್ಕಾಗಿ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಅಂತರ್ಜಾಲಗಳಿಗೆ ದೊಡ್ಡ ಪ್ರಮಾಣದಲ್ಲಿ ಹಣ ವೆಚ್ಚ ಮಾಡಿ ಇಡೀ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನೆ ಅಪಹರಿಸಿವೆ’ ಎಂದು ಮುಖ್ಯ ಚುನಾವಣಾ ಆಯುಕ್ತ ವಿ.ಎಸ್. ಸಂಪತ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಪ್ರಚಾರದ ಬಜೆಟ್ ₨10,000 ಕೋಟಿಯಾಗಿದ್ದು, ಅದರಲ್ಲಿ ಶೇ 90ರಷ್ಟು ಕಪ್ಪು ಹಣ ಎಂದು ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಆನಂದ್ ಶರ್ಮಾ ಅವರು ಮಾಡಿರುವ ಆರೋಪವನ್ನು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಆರೋಪವನ್ನು ನರೇಂದ್ರ ಮೋದಿ ಅವರು ಅಲ್ಲಗಳೆದಿದ್ದಾರೆ. ಈ ಕುರಿತು ವಿಸ್ತೃತ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ.