ಮಂಡ್ಯ: ಜಿಲ್ಲೆಯಲ್ಲಿರುವ ಕೃಷ್ಣರಾಜಸಾಗರ ಜಲಾಶಯದಲ್ಲಿ ನಡೆದ ಸಾಕ್ಷ್ಯಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ಬುಧವಾರ ಮುಖ್ಯ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಿದೆ.
ಜಲಾಶಯ ಪ್ರದೇಶದಲ್ಲಿ ಸಭೆ, ಚಿತ್ರೀಕರಣವನ್ನು ಸುರಕ್ಷತೆ ದೃಷ್ಟಿಯಿಂದ ನಿಷೇಧಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಅವರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ವಕ್ತಾರ ಟಿ.ಎಸ್.ಸತ್ಯಾನಂದ ದೂರಿನಲ್ಲಿ ತಿಳಿಸಿದ್ದಾರೆ.
ಅಲ್ಲದೇ ಗೌಡರು ಜಲಾಶಯದ ಅತಿಥಿಗೃಹದಲ್ಲಿಯೇ ಪತ್ರಿಕಾಗೋಷ್ಠಿಯನ್ನು ನಡೆಸಿದ್ದಾರೆ. ಚುನಾವಣೆ ಪ್ರಚಾರಕ್ಕೆ ಬಳಸಿಕೊಳ್ಳಲು ಈ ಸಾಕ್ಷ್ಯಚಿತ್ರವನ್ನು ತಯಾರಿಸಲಾಗುತ್ತಿದೆ. ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣೆ ಮುಗಿಯುವವರೆಗೂ ಸಾಕ್ಷ್ಯಚಿತ್ರದ ಪ್ರಸಾರಕ್ಕೆ ನಿಷೇಧ ಹೇರಬೇಕು ಎಂದು ಆಗ್ರಹಿಸಿದರು.