ಹೊಸಕೋಟೆ: ಗ್ರಾ.ಪಂ. ಮಟ್ಟದಲ್ಲೇ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತಹ ಗ್ರಾಮ ನ್ಯಾಯಾಲಯಗಳ ಕಾಯ್ದೆ ಸದ್ಯದಲ್ಲೇ ಜಾರಿಯಾಗಲಿದೆ ಎಂದು ಹೈಕೋರ್ಟ್ನ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ತಾಲ್ಲೂಕು ಪಂಚಾಯಿತಿ ಆಶ್ರಯದಲ್ಲಿ ಭಾನುವಾರ ತಾಲ್ಲೂಕಿನ ಗ್ರಾ.ಪಂ.ಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಕಾನೂನು ಅರಿವು ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
`ಇಂದು ಗ್ರಾಮಗಳು ಆರ್ಥಿಕ, ನೈತಿಕ, ಸಾಂಸ್ಕೃತಿಕ ದಿವಾಳಿತನಕ್ಕೆ ತುತ್ತಾಗುತ್ತಿದ್ದು, ಜನರ ಬದುಕು ದುಸ್ತರವಾಗಿದೆ. ಇಂತಹ ಸನ್ನಿವೇಶದಲ್ಲಿ ಚುನಾಯಿತ ಪ್ರತಿನಿಧಿಗಳು ಸವಾಲುಗಳನ್ನು ಮೆಟ್ಟಿ ನಿಲ್ಲುವ ಕಾರ್ಯ ಮಾಡಬೇಕಿದೆ ಎಂದು ಕರೆ ನೀಡಿದರು. ಸಚಿವ ಬಿ.ಎನ್.ಬಚ್ಚೇಗೌಡ `ಗ್ರಾಮ ರಾಜ್ಯ~ ಕೈಪಿಡಿ ಬಿಡುಗಡೆ ಮಾಡಿದರು.
ಹೈಕೋರ್ಟ್ ನ್ಯಾಯಮೂರ್ತಿ ವಿ.ಜಿ. ಸಭಾಹಿತ್ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ಲೋಹಾರ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ಮುನಿರಾಜು, ಉಪಾಧ್ಯಕ್ಷೆ ಶಾಂತಮ್ಮ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಟಿ.ಎಸ್.ರಾಜಶೇಖರ್ ಉಪಸ್ಥಿತರಿದ್ದರು. ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್.ಇಂದ್ರಕಲಾ ಸ್ವಾಗತಿಸಿದರು. ನ್ಯಾಯಾಧೀಶರಾದ ಎಸ್.ಶರ್ಮಿಳ ವಂದಿಸಿದರು.