ದೇವನಹಳ್ಳಿ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುವ ದೃಷ್ಟಿಯಿಂದ ಮಕ್ಕಳ ಗ್ರಾಮ ಸಭೆಯನ್ನು ನಡೆಸಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಕೆ.ಶಿವಪ್ಪ ತಿಳಿಸಿದರು.
ತಾಲ್ಲೂಕಿನ ಅಣ್ಣೇಶ್ವರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು.
ಅಧಿಕಾರ ವಿಕೇಂದ್ರೀಕರಣದಿಂದ ಗ್ರಾಮ ಪಂಚಾಯಿತಿಗೆ ಬಲ ಬಂದಿದ್ದು, ಸ್ಥಳೀಯ ಸಮಸ್ಯೆಗಳ ಇತ್ಯರ್ಥಕ್ಕೆ ಅನುಕೂಲವಾಗಿದೆ. ಪಠ್ಯ ವಿಷಯಗಳೊಂದಿಗೆ ಮಾಸಿಕ ಮಕ್ಕಳ ಗ್ರಾಮಸಭೆಯನ್ನು ನಡೆಸಿದಾಗ ವಿದ್ಯಾರ್ಥಿಗಳು ಕ್ರಿಯಾಶೀಲರಾಗಲು ನೆರವಾಗುತ್ತದೆ ಎಂದರು.
ಶಿಕ್ಷಣ ಸಂಯೋಜಕ ರವಿ ಪ್ರಕಾಶ್ ಮಾತನಾಡಿ, ಶಿಕ್ಷಣ ನೀಡುವುದು ಪೋಷಕರ ಕರ್ತವ್ಯ. ಶಿಕ್ಷಕರು ವಿದ್ಯಾರ್ಥಿಗಳಿಗೆ ಅರ್ಥವಾಗುವ ರೀತಿ ಬೋಧಿಸಬೇಕು. ಈಗಾಗಲೇ ಪ್ರಾಥಮಿಕ ಹಂತದಿಂದಲೇ ಕನ್ನಡ ಮಾಧ್ಯಮವಿದ್ದರೂ ಆಂಗ್ಲ ಭಾಷೆಯನ್ನು ಒಂದು ವಿಷಯವನ್ನಾಗಿ ಬೋಧಿಸಲಾಗುತ್ತಿದೆ. ಆದರೆ ಪೋಷಕರು ಆಂಗ್ಲ ಮಾಧ್ಯಮದ ವ್ಯಾಮೋಹ ಬಿಡಬೇಕು. ಆರೋಗ್ಯ ಇಲಾಖೆ ಮಾಹಿತಿಯಂತೆ ಶಾಲೆಗಳಲ್ಲಿ ಪ್ರತಿ ಮಗುವಿಗೆ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ಅಲ್ಲದೆ ಸಮತೋಲನ ಆಹಾರ ನೀಡುವಂತೆ ಶಿಕ್ಷಕರಿಗೆ ಕೋರಲಾಗಿದೆ ಎಂದರು.
ಆಹಾರ ಪೂರೈಕೆ ಇಲಾಖೆ ಶಿರಸ್ತೇದಾರ್ ಕೃಷ್ಣಮೂರ್ತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋಪಾಲಯ್ಯ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ಅಧ್ಯಕ್ಷತೆವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆಂಜಿನಪ್ಪ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸೋಮಮೂರ್ತಿ, ಗ್ರಾ.ಪಂ.ಸದಸ್ಯ ಚಂದ್ರಶೇಖರ್, ನಾರಾಯಣಸ್ವಾಮಿ, ಮಂಗಳ ಶ್ರಿರಾಮ, ಬಿ.ಎಂ.ನಾರಾಯಣಸ್ವಾಮಿ, ಸಿ.ಆರ್.ಸಿ ಶಿವಕುಮಾರ್ ಮತ್ತಿತರರು ಇದ್ದರು.