ಬಂಗಾರಪೇಟೆ: ಪ್ರತಿಫಲವನ್ನು ಅಪೇಕ್ಷಿಸದೆ ಜನಸಾಮಾನ್ಯರ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿರುವ ವಿದ್ಯಾ ಆರೋಗ್ಯ ಗ್ರಾಮ ಸೇವಾ ಸಮಿತಿ ಕಾರ್ಯವು ಮೆಚ್ಚುವಂಥದ್ದು ಎಂದು ಶಾಸಕ ಎಂ.ನಾರಾಯಣಸ್ವಾಮಿ ಹೇಳಿದರು.
ತಾಲ್ಲೂಕಿನ ಕೇತಗಾನಹಳ್ಳಿಯಲ್ಲಿ ಗುರುವಾರ ಸಮಿತಿಯ 5ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಸರ್ಕಾರದ ಜೊತೆಗೆ ಸ್ವಯಂ ಸೇವಾ ಸಂಸ್ಥೆಗಳು ಕೈಜೋಡಿಸುವುದರಿಂದ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬಹುದು ಎಂದರು.
ವಿಧಾನ ಪರಿಷತ್ ಸದಸ್ಯೆ ಎಸ್. ಆರ್.ಲೀಲಾ ಮಾತನಾಡಿ, ಕೇವಲ ಒಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಾರಂಭವಾಗಿ ಇಂದು ಸುಮಾರು 5 ಗ್ರಾಮ ಪಂಚಾಯಿತಿಗಳಲ್ಲಿ ಸೇವೆಯನ್ನು ವಿಸ್ತರಿಸಿ, ಗ್ರಾಮೀಣ ಭಾಗದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಮಿತಿಯ ಸೇವೆ ಶ್ಲಾಘನೀಯ ಎಂದರು. ಇದೇ ಸಂದರ್ಭದಲ್ಲಿ ಸೂತ್ರದ ಬೊಂಬೆಯಾಟ ಕಾರ್ಯಕ್ರಮವನ್ನು ಬೆಂಗಳೂರಿನ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಲಾಗಿತ್ತು.
ಕರ್ನಾಟಕ ವಿದ್ಯುತ್ ಕಾರ್ಖಾನೆ ಅಧ್ಯಕ್ಷ ಬಿ.ಪಿ.ವೆಂಕಟಮುನಿಯಪ್ಪ, ಜಿ. ಪಂ. ಸದಸ್ಯೆ ಸೀಮೋಲ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಸಮಿತಿ ಅಧ್ಯಕ್ಷ ಮೋಹನಮೂರ್ತಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ವಿಜಯಲಕ್ಷ್ಮಿ, ರೇಣುಕಾ ಬಾಲಚಂದ್ರ, ಅಂಬೂಬಾಯಿ, ನಾರಾಯಣಸ್ವಾಮಿ, ಬಿಜೆಪಿತಾಲ್ಲೂಕು ಘಟಕದ ಅಧ್ಯಕ್ಷ ಕೃಷ್ಣಪ್ಪ, ಕೇತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೋವಿಂದಮ್ಮ ಭಾಗವಹಿಸಿದ್ದರು.