ಬೆಂಗಳೂರು:`ಬಿಜೆಪಿ ಜೊತೆ ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ವಿಲೀನಗೊಳಿಸುವ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ಈ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ' ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸ್ಪಷ್ಟಪಡಿಸಿದರು.
ಭಾನುವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 122ನೇ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಮುಂಬಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, `ಬಿಎಸ್ಆರ್ ಕಾಂಗ್ರೆಸ್ನ ಅಧ್ಯಕ್ಷ ಬಿ.ಶ್ರೀರಾಮುಲು ಅವರು ವೈಯಕ್ತಿಕ ಕಾರಣಗಳಿಗಾಗಿ ನನ್ನನ್ನು ಭೇಟಿ ಮಾಡಿದ್ದರು. ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆಯಲಿಲ್ಲ' ಎಂದರು.
`ಬಿಜೆಪಿ ಜೊತೆ ಬಿಎಸ್ಆರ್ ಕಾಂಗ್ರೆಸ್ ವಿಲೀನಗೊಳ್ಳಲಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಈ ಸಂಬಂಧ ಪಕ್ಷದ ಯಾವುದೇ ಹಂತದಲ್ಲೂ ಚರ್ಚೆ ನಡೆದಿಲ್ಲ. ಬಿಎಸ್ಆರ್ ನಾಯಕರ ಜೊತೆಗೂ ಚರ್ಚೆ ನಡೆದಿಲ್ಲ' ಎಂದರು.