ಕೇಂದ್ರ ಸರ್ಕಾರದ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿ ಆಯೋಜಿಸಿದ್ದ ತಪಾಸಣೆ ಶಿಬಿರದಲ್ಲಿ ಪಾಲ್ಗೊಳ್ಳಲು ಜಿಲ್ಲೆಯ ಆರು ತಾಲ್ಲೂಕುಗಳಿಂದಲೂ ವಿದ್ಯಾರ್ಥಿಗಳು ಬಂದಿದ್ದರು. ಕೆಲವರು ಶಾಲೆಯ ಮುಖ್ಯಶಿಕ್ಷಕರೊಂದಿಗೆ ಬಂದಿದ್ದರೆ, ಇನ್ನೂ ಕೆಲವರು ಪೋಷಕರೊಂದಿಗೆ ಬಂದಿದ್ದರು. ಮಕ್ಕಳನ್ನು ಕಂಕುಳಲ್ಲಿ ಎತ್ತಿಕೊಂಡು ಪೋಷಕರು ಬರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಮಾತ್ರವೇ ಸೀಮಿತಗೊಳಿಸಲಾಗಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಇದೇ ಪ್ರಥಮ ಬಾರಿಗೆ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ವಿಸ್ತರಿಸಿದ್ದ ಕಾರಣ ಅವರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ ಬಳಿ ಶಾಲೆಗಳ ಆವರಣದಲ್ಲಿ ನಡೆದ ಶಿಬಿರದಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಜಿಲ್ಲೆಯ 107 ಸರ್ಕಾರಿ ಪ್ರೌಢಶಾಲೆ ಮತ್ತು 37 ಅನುದಾನಿತ ಶಾಲೆಗಳಲ್ಲಿನ 150ಕ್ಕೂ ಹೆಚ್ಚು ವಿಶೇಷ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗಿದೆ. ವಿದ್ಯಾರ್ಥಿಗಳು ಯಾವ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂಬುದನ್ನು ಪಟ್ಟಿ ಮಾಡಿಕೊಳ್ಳುತ್ತೇವೆ. ಯಾವ ಸಾಧನ-ಸಲಕರಣೆ ಅಗತ್ಯವಿದೆ ಎಂಬುದನ್ನು ವೈದ್ಯರಿಂದ ತಿಳಿದುಕೊಳ್ಳುತ್ತೇವೆ. ಸಾರ್ವನಿಕ ಶಿಕ್ಷಣ ಇಲಾಖೆಯ ಕೇಂದ್ರ ಕಚೇರಿಗೆ ವರದಿ ಸಲ್ಲಿಸುತ್ತೇವೆ.
ಅಕ್ಟೋಬರ್ ಅಥವಾ ನವೆಂಬರ್ ಒಳಗೆ ರಾಷ್ಟ್ರೀಯ ಮಾಧ್ಯಮ ಯೋಜನೆಯಡಿ ಸಾಧನ-ಸಲಕರಣೆ ವಿತರಿಸುತ್ತೇವೆ ಎಂದು ಯೋಜನೆ ಸಂಯೋಜನಾಧಿಕಾರಿ ಕೆ.ಮಂಜುನಾಥ್ `ಪ್ರಜಾವಾಣಿ'ಗೆ ತಿಳಿಸಿದರು. ಶಿಬಿರದ ಸಂಯೋಜಕರಾದ ಕೃಷ್ಣಮೂರ್ತಿ, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.