ನವದೆಹಲಿ: ಟೆಲಿಕಾಂ ಹಗರಣದಲ್ಲಿ ಗೃಹ ಸಚಿವ ಪಿ. ಚಿದಂಬರಂ ಪಾತ್ರ ಕುರಿತು ತನಿಖೆ ನಡೆಸಬೇಕು ಎಂದು ಕೇಳಿರುವ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಎರಡು ವಾರಗಳಲ್ಲಿ ಪ್ರಕರಣ ಇತ್ಯರ್ಥಪಡಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.
ಈ ವಿಷಯವನ್ನು ಇತ್ಯರ್ಥಪಡಿಸುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ಬಿಟ್ಟಿದೆ. ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದಂತೆ ಆಗಬಾರದೆಂಬ ಉದ್ದೇಶದಿಂದ ಸಿಬಿಐಗೆ ತಾನು ಯಾವುದೇ ನಿರ್ದೇಶನ ನೀಡುವುದಿಲ್ಲ ಎಂದು ಪೀಠ ತಿಳಿಸಿದೆ.
ಯುಪಿಎ- 1 ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಚಿದಂಬರಂ ಪಾತ್ರ ಕುರಿತು ತನಿಖೆ ನಡೆಸುವಂತೆ ಡಾ. ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಗಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಒ.ಪಿ. ಸೈನಿ ತಮ್ಮ ತೀರ್ಪನ್ನು ಫೆ. 4ಕ್ಕೆ ಕಾಯ್ದಿರಿಸಿದ್ದಾರೆ. 2ಜಿ ಪರವಾನಗಿ ದರ ನಿಗದಿಯಲ್ಲಿ ಚಿದಂಬರಂ ಪಾತ್ರವಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.