ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಚೀನಾ ಭೂಮಿ ಅತಿಕ್ರಮಿಸಿಲ್ಲ'

Last Updated 6 ಸೆಪ್ಟೆಂಬರ್ 2013, 9:47 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ/ಐಎಎನ್‌ಎಸ್) : ಭಾರತದ ಯಾವುದೇ ಪ್ರದೇಶವನ್ನು ಚೀನಾಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ರಾಷ್ಟ್ರದ ಭದ್ರತೆಯನ್ನು ಕಾಪಾಡಲು ಬೇಕಾದ ಎಲ್ಲಾ ಕ್ರಮಗಳನ್ನೂ ತೆಗೆದುಕೊಳ್ಳಲಾಗಿದೆ ಎಂದು ರಕ್ಷಣಾ ಸಚಿವ ಎ ಕೆ ಆಂಟನಿ ಶುಕ್ರವಾರ ಸ್ಪಷ್ಟಪಡಿಸಿದರು.

ಲೋಕಸಭೆಯಲ್ಲಿ ಸರ್ಕಾರದ ಉನ್ನತ ಮಟ್ಟದ ಸಮಿತಿಯ ವರದಿಯಂತೆ ಲಡಾಕ್‌ನಲ್ಲಿ ಭಾರತಕ್ಕೆ ಸೇರಿದ 640 ಚದರ ಕಿ.ಮೀ ಪ್ರದೇಶವನ್ನು ಚೀನಾ ಅಕ್ರಮಿಸಿಕೊಂಡಿದೆ ಎಂದು ಪ್ರತಿಪಕ್ಷ ಬಿಜೆಪಿ ಹಾಗೂ ಯುಪಿಎ ಮಿತ್ರ ಪಕ್ಷ ಸಮಾಜವಾದಿ ಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಆರೋಪಿಸಿದರು.

ಇದನ್ನು ಅಲ್ಲಗಳೆದ ಆಂಟನಿ, ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಅಧ್ಯಕ್ಷ ಶ್ಯಾಮ್ ಸರನ್ ಅವರು ಆಗಸ್ಟ್ 2 ರಿಂದ 9ರ ವರೆಗೆ ಲಡಾಕ್‌ಗೆ ಭೇಟಿ ನೀಡಿದ್ದರು. ಆಗ ಗಡಿ ಪ್ರದೇಶದ ಪರಿಸ್ಥಿತಿಯ ಕುರಿತಾದ ವರದಿಯೊಂದನ್ನು ಸಿದ್ಧಪಡಿಸಿ ಸರ್ಕಾರಕ್ಕೆ ನೀಡಿದ್ದರು. ಆ ವರದಿಯಲ್ಲಿ ಭಾರತಕ್ಕೆ ಸೇರಿದ ಪ್ರದೇಶವನ್ನು ಚೀನಾ ವಶಪಡಿಸಿಕೊಂಡಿದೆ ಎಂದಾಗಲಿ ಅಥವಾ ಅಲ್ಲಿಗೆ ಭಾರತೀಯ ಸೈನಿಕರು ಪ್ರವೇಶಿಸದಂತೆ ತಡೆಯಲಾಗುತ್ತಿದೆ ಎಂದು ಎಲ್ಲಿಯೂ ಹೇಳಿಲ್ಲ. ಅಲ್ಲದೆ ಭಾರತದ ಯಾವುದೇ ಪ್ರದೇಶವನ್ನು ಚೀನಾಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಸದನಕ್ಕೆ ಭರವಸೆ ಕೊಡುತ್ತೇನೆ ಎಂದರು.

ಅಲ್ಲದೆ, ರಾಷ್ಟ್ರದ ಭದ್ರತೆಯನ್ನು ಕಾಪಾಡಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ದೇಶದ ಹಿತಾಸಕ್ತಿ ಕಾಪಾಡಲು ಗಡಿ ಪ್ರದೇಶದಲ್ಲಿ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದರು.

ಲಡಾಕ್ ಪ್ರದೇಶದಲ್ಲಿ ಅಗತ್ಯವಿರುವ  ವಾಯುಯಾನ ಸೌಲಭ್ಯ ಸೇರಿದಂತೆ ಭೂ ಕಬಳಿಕೆ, ಪರಿಸರ ಮತ್ತು ವನ್ಯಜೀವಿಗಳಿಗೆ ಪರವಾನಿಗೆ ನೀಡುವ ಕುರಿತಾಗಿ ವರದಿಯಲ್ಲಿ ತಿಳಿಸಲಾಗಿದೆ ಎಂದು ಇದೇ ವೇಳೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT