ಬೆಂಗಳೂರು: ಚೀನಾದ ಡಾಲಿಯನ್ನಲ್ಲಿ ವಿಶ್ವ ಆರ್ಥಿಕ ವೇದಿಕೆ ವತಿಯಿಂದ ಶುಕ್ರವಾರ ನಡೆದ ಆಹಾರ ಭದ್ರತೆ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಜಾರಿಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ ಯೋಜನೆಗಳ ಮಹತ್ವದ ಬಗ್ಗೆ ವಿವರಿಸಿದರು.
ಒಂದು ರೂಪಾಯಿಗೆ ಒಂದು ಕೆ.ಜಿ ಯಂತೆ ಪ್ರತಿ ಕುಟುಂಬಕ್ಕೆ ಗರಿಷ್ಠ 30 ಕೆ.ಜಿ ಅಕ್ಕಿ ನೀಡುವ ಯೋಜನೆಯಿಂದ ಬಡವರಿಗೆ ತುಂಬಾ ಅನುಕೂಲವಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಈಚೆಗೆ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೊಳಿಸಿದೆ. ಆಹಾರ ಉತ್ಪಾದನೆಯಲ್ಲಿ ದೇಶ ಸ್ವಾವಲಂಬಿಯಾಗಿದ್ದು, ಆಹಾರ ಧಾನ್ಯಗಳ ದಾಸ್ತಾನಿಗೂ ವ್ಯವಸ್ಥೆ ಮಾಡಲಾಗಿದೆ ಎಂದರು.
ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆ ಇರುವುದನ್ನು ಮನಗಂಡು ಶಾಲಾ ಮಕ್ಕಳಿಗೆ ಹಾಲು ವಿತರಿಸುವ ಕ್ಷೀರಭಾಗ್ಯ, ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ವಿವರಿಸಿದರು.
2020ರ ವೇಳೆಗೆ 300 ದಶಲಕ್ಷ ಟನ್ ಆಹಾರದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕೃಷಿ ವಲಯಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದರು.
ಮಾಹಿತಿ ತಂತ್ರಜ್ಞಾನದ ಸದುಪಯೋಗ ಪಡೆದುಕೊಂಡು ತುಂತುರು ನೀರಾವರಿ, ಜಲಾನಯನ ಅಭಿವೃದ್ಧಿ, ಸಮಗ್ರ ಕೃಷಿಗೆ ಆದ್ಯತೆ ನೀಡುವ ಅವಶ್ಯಕತೆ ಇದೆ ಎಂದರು.
ಆಹಾರ ಭದ್ರತಾ ಯೋಜನೆಯನ್ನು ಜಾರಿಗೊಳಿಸಿರುವುದರಿಂದ ಬಡವರಿಗೆ ಅನುಕೂಲವಾಗಲಿದೆ. ಅಲ್ಲದೆ ಅವರ ಆದಾಯದ ಸ್ವಲ್ಪ ಭಾಗವನ್ನು ಮಕ್ಕಳ ಶಿಕ್ಷಣಕ್ಕೆ ವೆಚ್ಚ ಮಾಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು.