ಚಾಮರಾಜನಗರ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಎಂ.ವಿ. ಸಾವಿತ್ರಿ ಏ. 10ರಂದು ಅಧಿಸೂಚನೆ ಹೊರಡಿಸಲಿದ್ದಾರೆ.
ಬುಧವಾರದಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ. 17ರಂದು ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. ಪ್ರತಿದಿನ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ಗಂಟೆವರೆಗೆ ನಾಮಪತ್ರ ಸ್ವೀಕರಿಸಲಾಗುತ್ತದೆ. ಏ. 11ರಂದು ಚಾಂದ್ರಮಾನ ಯುಗಾದಿ ಹಾಗೂ ಏ. 14ರ ಭಾನುವಾರದ ಸಾರ್ವತ್ರಿಕ ರಜಾದಿನ ಹೊರತುಪಡಿಸಿ ಉಳಿದ ದಿನಗಳಂದು ನಾಮಪತ್ರ ಸಲ್ಲಿಸಬಹುದು.
ನಾಮಪತ್ರ ಪರಿಶೀಲನಾ ಕಾರ್ಯವು ಏ. 18ರಂದು ನಡೆಯಲಿದೆ. ಏ. 20ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಅಂತಿಮ ದಿನ. ಅಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 3ಗಂಟೆವರೆಗೆ ಉಮೇದುವಾರಿಕೆ ವಾಪಸ್ ಪಡೆಯಬಹುದು. ಮೇ 5ರಂದು ಬೆಳಿಗ್ಗೆ 7ರಿಂದ ಸಂಜೆ 5ಗಂಟೆವರೆಗೆ ಮತದಾನ ನಡೆಯಲಿದೆ. ಮೇ 8 ರಂದು ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭ ಗೊಳ್ಳಲಿದೆ. ಮೇ 11ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ನಾಮಪತ್ರ ಸ್ವೀಕಾರವು ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ನಾಮಪತ್ರ ಸಲ್ಲಿಕೆಯು ನಗರದ ಮಿನಿ ವಿಧಾನಸೌಧ ಕಟ್ಟಡದ ತಾಲ್ಲೂಕು ಕಚೇರಿಯ ನೆಲ ಮಹಡಿಯ ಸಭಾಂಗಣ ಕೊಠಡಿ ಸಂಖ್ಯೆ 1ರಲ್ಲಿ ನಡೆಯ ಲಿದೆ. ಚುನಾವಣಾಧಿಕಾರಿ ಪಿ. ಸಂಬಯ್ಯ ಹಾಗೂ ಸಹಾಯಕ ಚುನಾವಣಾಧಿಕಾರಿ ಚಂದ್ರ ಕಾಂತ್ ಭಜಂತ್ರಿ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದು.
ಹನೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ನಾಮಪತ್ರ ಸಲ್ಲಿಕೆಯು ಕೊಳ್ಳೇಗಾಲ ಪಟ್ಟಣದಲ್ಲಿರುವ ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ತಾಲ್ಲೂಕು ಕಚೇರಿಯ 1ನೇ ಮಹಡಿಯ ಕೊಠಡಿ ಸಂಖ್ಯೆ 4ರಲ್ಲಿ ನಡೆಯಲಿದೆ. ಚುನಾವಣಾಧಿಕಾರಿ ಬಿ. ರಮೇಶ್ ಹಾಗೂ ಸಹಾಯಕ ಚುನಾವಣಾಧಿಕಾರಿ ಮಾಳಿಗಯ್ಯ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದು.
ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ನಾಮಪತ್ರಗಳನ್ನು ಕೊಳ್ಳೇಗಾಲ ಪಟ್ಟಣದ ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ಉಪ ವಿಭಾಗಾಧಿಕಾರಿ ಕಚೇರಿಯ 1ನೇ ಮಹಡಿಯ ಕೊಠಡಿ ಸಂಖ್ಯೆ 1ರಲ್ಲಿ ಸಲ್ಲಿಸಬೇಕು. ಚುನಾವಣಾಧಿಕಾರಿ ಸತೀಶ್ಬಾಬು ಹಾಗೂ ಸಹಾಯಕ ಚುನಾವಣಾಧಿಕಾರಿ ಬಿ. ಚಂದ್ರಪ್ಪ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕರಿಸುವರು. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ನಾಮಪತ್ರ ಸಲ್ಲಿಕೆಯು ಗುಂಡ್ಲುಪೇಟೆ ಪಟ್ಟಣದ ಮಿನಿ ವಿಧಾನಸೌಧ ಕಟ್ಟಡದ ತಾಲ್ಲೂಕು ಕಚೇರಿಯ 1ನೇ ಮಹಡಿಯ ಕೊಠಡಿ ಸಂಖ್ಯೆ 42ರಲ್ಲಿ ನಡೆಯಲಿದೆ. ಚುನಾವಣಾಧಿಕಾರಿ ಕೆ.ಎಂ. ಸೋಮಸುಂದರ್ ಹಾಗೂ ಸಹಾಯಕ ಚುನಾವಣಾಧಿಕಾರಿ ಎನ್.ಎಸ್. ಚಿದಾನಂದ ಸ್ವೀಕರಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.