ಅಜ್ಜಂಪುರ: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಪಟ್ಟಣ ಸಮೀಪದ ಚೀರನಹಳ್ಳಿ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯಿತಿ ಮುಂದೆ ಶನಿವಾರ ಪ್ರತಿಭಟಿಸಿದರು.
500ಕ್ಕೂ ಅಧಿಕ ಮನೆ, 2000ಕ್ಕೂ ಹೆಚ್ಚು ಜನಸಂಖ್ಯೆ ಇರುವ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದಲೂ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ನೀರಿನ ಬವಣೆಗೆ ಸಿಲುಕಿರುವ ಮಹಿಳೆಯರು ಮಕ್ಕಳೊಂದಿಗೆ ಬಿಂದಿಗೆ ಹಿಡಿದು ದೂರದ ತೋಟದ ಕೊಳವೆ ಬಾವಿಗಳತ್ತ ತೆರಳಿ ನೀರು ತರುವುದು ಸಾಮಾನ್ಯವಾಗಿದೆ. ನಾಲ್ಕಾರು ಕಿಲೋ ಮೀಟರ್ ದೂರದ ಕೆರೆಕಟ್ಟೆಗಳಿಗೆ ಜಾನುವಾರುಗಳನ್ನು ಕೊಂಡೊಯ್ಯುವ ಅನಿವಾರ್ಯತೆ ಒದಗಿದೆ. ನೀರಿನ ಕೊರತೆಯಿಂದ ಸಿಗುವ ಅಶುದ್ದ ನೀರನ್ನೇ ಕುಡಿಯುವ ಗ್ರಾಮಸ್ಥರಲ್ಲಿ ಹಾಗೂ ನೈರ್ಮಲ್ಯದ ಸಮಸ್ಯೆಯೂ ಉಂಟಾಗಿರುವ ಗ್ರಾಮದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಕಾಡುತ್ತಿದೆ.
ಕಳೆದೆರಡು ವರ್ಷದಿಂದಲೂ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾ.ಪಂ. ಅಧ್ಯಕ್ಷರು, ಶಾಸಕರು, ತಹಶೀಲ್ದಾರ್, ಜಿಲ್ಲಾಧಿಕಾರಿಗೂ ಮನವಿ ಮಾಡಲಾಗಿದೆ. ಆದರೆ ಗ್ರಾಮದ ನೀರಿನ ಸಮಸ್ಯೆಯ ತೀವ್ರತೆಯನ್ನು ಹಗುರವಾಗಿ ಪರಿಗಣಿಸಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶಾಶ್ವತವಾಗಿ ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ. ಸಮಸ್ಯೆ ಹೀಗೆ ಮುಂದುವರೆದರೆ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಗ್ರಾಮದ ವಿಜಯ್ಕುಮಾರ್, ಪರಮೇಶ್ವರಪ್ಪ, ನಿಂಗದಾಸಪ್ಪ ತಿಳಿಸಿದರು.
ಸಮಸ್ಯೆ ಬಗೆಹರಿಸುವುದಾಗಿ ಚುನಾವಣೆ ಸಮಯದಲ್ಲಿ ಮತ ಕೇಳಲು ಬರುವ ಜನಪ್ರತಿನಿಧಿಗಳು ನಂತರ ಇತ್ತ ಸುಳಿಯುವುದಿಲ್ಲ. ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಶಿವನಿ ಗ್ರಾಮಕ್ಕೆ ಇತ್ತೀಚೆಗೆ ಬಂದಿದ್ದ ಜಿಲ್ಲಾಧಿಕಾರಿಗಳನ್ನು ಕೋರಿದ್ದರೂ ಪ್ರಯೋಜನ ಆಗಿಲ್ಲ. ಒಂದೆರಡು ದಿನಗಳಲ್ಲಿ ನೀರು ಪೂರೈಸದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ ನಂಜುಂಡಪ್ಪ, ಎರಡು ತಿಂಗಳಲ್ಲಿ 650 ಅಡಿ ಆಳದವರೆಗೆ ನಾಲ್ಕು ಕೊಳವೆ ಬಾವಿ ಕೊರೆಸಿದರೂ ನೀರು ಸಿಗದಿರುವುದು ಸಮಸ್ಯೆಗೆ ಕಾರಣವಾಗಿದೆ. ಸಮೀಪದ ಬೇರೊಂದು ಗ್ರಾಮದಲ್ಲಿ ಕೊಳವೆ ಬಾವಿ ಕೊರೆಸಿ, ಅಲ್ಲಿಂದ ನೀರು ತರುವಂತೆ ತಾಲ್ಲೂಕು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗೆ ಮನವಿ ಮಾಡಲಾಗಿದೆ ಎಂದರು.