ಹಾವೇರಿ: ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹಸಿರುಕ್ರಾಂತಿಯ ಹರಿ ಕಾರ, ಮಾಜಿ ಉಪಪ್ರಧಾನಿ ದಿ.ಬಾಬು ಜಗಜೀವನರಾಂ ಅವರ 106ನೇ ಜಯಂತಿ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು.
ಜಿಲ್ಲಾಡಳಿತ, ಜಿ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯ ದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾಧಿ ಕಾರಿ ವಿ.ಅನ್ಬುಕುಮಾರ ಬಾಬೂಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿ ಅನ್ಬುಕುಮಾರ ಅವರು, ಬಾಬು ಜಗಜೀವನರಾಂ ಅಪ್ರತಿಮ ಹೋರಾಟದ ಮೂಲಕ ಕೆಳ ವರ್ಗದ ಜನರ ಏಳ್ಗೆಗೆ ಶ್ರಮಿಸಿದ ಮಹಾನ್ ಪುರುಷ ಎಂದು ಬಣ್ಣಿಸಿದರು.
ಜಗಜೀವನರಾಂ ಭಾರತದ ರಕ್ಷಣಾ ಸಚಿವರಾಗಿ, ಕೃಷಿ ಸಚಿವರಾಗಿ ದೇಶದ ರಕ್ಷಣೆ ಹಾಗೂ ಅಭಿವೃದ್ಧಿಯಲ್ಲಿ ಮಹೋನ್ನತ ಸಾಧನೆಗೆ ಕಾರಣ ರಾಗಿ ದ್ದಾರೆ. ಅವರ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿ ಕೊಳ್ಳುವ ಮೂಲಕ ದೇಶದ ಅಭಿವೃದ್ಧಿಗೆ ಮುಂದಾಗಬೇಕು ಎಂದರು.
ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನಸಿಂಗ್ ರಾಠೋರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಕುಸುಗಲ್, ಅಪರ ಜಿಲ್ಲಾಧಿಕಾರಿ ಜಿ. ಜಗದೀಶ, ಸಮಾಜ ಕಲ್ಯಾಣಾಧಿಕಾರಿ ಎಸ್.ಸಿ,ತಿರ್ಲಾಪುರ, ಉಪವಿಭಾಗಾಧಿ ಕಾರಿಗಳು, ಜಿ.ಪಂ. ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು, ಸಿಬ್ಬಂದಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.