ಈ ಮೊದಲು ಜಾಮೀನು ಕೋರಿ ಜಗನ್ ಅವರು ಸಲ್ಲಿಸಿದ್ದ ಎರಡು ಪ್ರತ್ಯೇಕ ಜಾಮೀನು ಅರ್ಜಿಗಳನ್ನು ಸಿಬಿಐ ನ್ಯಾಯಾಲಯವು ಪ್ರಕರಣದ ವಿಚಾರಣೆಯು ಬಾಕಿ ಇರುವುದರಿಂದ ಈ ಸಂದರ್ಭದಲ್ಲಿ ಜಾಮೀನು ನೀಡುವುದರಿಂದ ಸಾಕ್ಷ್ಯಗಳ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ಹೇಳಿ ವಜಾಗೊಳಿಸಲಾಗಿತ್ತು.
ಸಿಬಿಐ ನ್ಯಾಯಾಲಯದ ಈ ಕ್ರಮವನ್ನು ಪ್ರಶ್ನಿಸಿ ಜಗನ್ ಅವರು ಆಂಧ್ರ ಪ್ರದೇಶ ಹೈಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆಗೆ ಡಿಸೆಂಬರ್ 11 ರಂದು ನಡೆಯಲಿದೆ.
ಜಗನ್ ಅವರು ಜಾಮೀನು ಕೋರಿ ಎರಡನೇಯ ಬಾರಿಗೆ ಅರ್ಜಿ ಸಲ್ಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬಿಐನ ಉಪ ಕಾನೂನು ಸಲಹಾಧಿಕಾರಿ ಬಲ್ಲಾ ರವೀಂದ್ರನಾಥ್ ಅವರು ಜಗನ್ ಅವರ ವಿರುದ್ಧದ ಏಳು ಪ್ರಕರಣಗಳ ತನಿಖೆ ಪೂರ್ಣಗೊಳಿಸಲು ಕೇಂದ್ರ ತನಿಖಾ ತಂಡಕ್ಕೆ ಸುಪ್ರೀಂ ಕೋರ್ಟ್ ಯಾವುದೇ ರೀತಿಯ ಗಡುವು ನೀಡಿಲ್ಲ. ಸಿಬಿಐ ತನಿಖೆ ಪೂರ್ಣಗೊಳಿಸಿದ ನಂತರ ಬೇಕಾದರೆ ಜಗನ್ ಅವರು ವಿಚಾರಣಾ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಲಿ ಈ ಹಂತದಲ್ಲಿ ಅವರಿಗೆ ಜಾಮೀನು ನೀಡಬಾರದು ಎಂದು ಹೇಳಿದರು.