ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ಜಾರಿಗೆ ತರುತ್ತಿರುವ ಜನಪರ ಯೋಜನೆಗಳನ್ನು ಸಹಿಸಿಕೊಳ್ಳದೆ, ಬಿಜೆಪಿ ಜನರಲ್ಲಿ ಗೊಂದಲ ಸೃಷ್ಟಿಮಾಡುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ದೂರಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಸರ್ಕಾರ ಬಡವರ ಶ್ರೇಯೋಭಿವೃದ್ಧಿಗೆ ಜಾರಿಗೆ ತರಲಾಗುತ್ತಿರುವ ಹಲವು ಯೋಜನೆಗಳನ್ನು ಸಹಿಸದ ಬಿಜೆಪಿ ಸರ್ಕಾರ ಪದೇ ಪದೇ ಸರ್ಕಾರದ ಮೇಲೆ ವಾಗ್ವಾದ ನಡೆಸುತ್ತಿರುವುದು ಖಂಡನೀಯ ಎಂದರು.
ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಬೇಕು ಎಂಬ ಗುರಿ ರಾಜ್ಯ ಸರ್ಕಾರದಾಗಿದ್ದು, ಆ ನಿಟ್ಟಿನಲ್ಲಿ ಅನ್ನ ಭಾಗ್ಯ ಯೋಜನೆ ಕೂಡ ಜಾರಿಗೆ ತರಲಾಗಿದೆ. ಅಲ್ಪ ಸಂಖ್ಯಾತರ ಏಳಿಗೆಗಾಗಿ ಜಾರಿಗೆ ತಂದಿರುವ ಬಿದಾಯಿ ಯೋಜನೆ ಜಾರಿಗೆತಂದಿರುವುದರಿಂದ ಬಿಜೆಪಿಗೆ ಸಹಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ ಎಂದು ಕಿಡಿಕಾರಿದರು.
ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಕೇವಲ ಭ್ರಷ್ಟಾಚಾರದಲ್ಲಿ ತೊಡಗುವ ಮೂಲಕ ಜನಪರ ಯೋಜನೆಗಳನ್ನು ಜಾರಿಗೆ ತರದೆ, ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವುದರಲ್ಲಿಯೂ ವಿಫಲವಾಯಿತು ಎಂದು ದೂರಿದರು.
ಇನ್ನು ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಬರಲಿದ್ದು, ಪಕ್ಷದ ನಾಯಕನನ್ನು ಗೆಲ್ಲಿಸುವುದಕ್ಕೆ ಕಾರ್ಯಕರ್ತರು ಮುಂದಾಗಬೇಕಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಕೆ.ಕರಿಯಣ್ಣ, ನಗರಸಭೆ ಅಧ್ಯಕ್ಷೆ ಖುರ್ಷಿದಾ ಬಾನು, ಮುಖಂಡರಾದ ರಮೇಶ್, ರವಿಕುಮಾರ್, ರುದ್ರೇಶ್ ಮತ್ತಿತರರು ಉಪಸ್ಥಿತರಿದ್ದರು.
ಹೋಬಳಿಗೊಂದು ವಸತಿ ಶಾಲೆ ಯೋಜನೆ ತಯಾರಿ
ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಿದ್ಯಾರ್ಥಿನಿಲಯದ ಹೆಣ್ಣುಮಕ್ಕಳಿಗಳಿಗೆ ನ್ಯಾಪ್ ಕಿನ್ಸ್ ಹಾಗೂ ಎಲ್ಲ ನಿಲಯಗಳಿಗೆ ಸೋಲಾರ್ ವಾಟರ್ ಹೀಟರ್ ಅಳವಡಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದರು.
ಮಹಿಳಾ ಹಾಸ್ಟೆಲ್ ಗಳಲ್ಲಿ ನೀರು ಹಾಗೂ ಸ್ವಚ್ಛತೆ ಕುರಿತ ಸಮಸ್ಯೆಗಳು ಹೆಚ್ಚಾಗಿದ್ದು, ಅವುಗಳನ್ನು ಪರಿಹರಿಸುವ ಕಡೆಗೆ ಮುಂದಿನ ದಿನಗಳಲ್ಲಿ ಗಮನಹರಿಸಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಭಾನುವಾರ ತಿಳಿಸಿದರು.
ಹೋಬಳಿಗೊಂದರಂತೆ ರಾಜ್ಯದಲ್ಲಿ ಸುಮಾರು 200 ವಸತಿಯುತ ಶಾಲೆಗಳು ನಿರ್ಮಾಣವಾಗಬೇಕಿದ್ದು, ಅವುಗಳಿಗಾಗಿ ಜಮೀನು ಗುರುತಿಸುವ ಕಾರ್ಯವನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬರುವ ಫಲಾನುಭವಿಗಳಿಗೆ ವಿದ್ಯುತ್ ನೀಡುವ ಗುರಿ ಹೊಂದಲಾಗಿದ್ದು, ಜನವರಿ 2014ರ ಒಳಗಾಗಿ ಸುಮಾರು 40ಸಾವಿರ ಬೋರ್ ವೆಲ್ ಕೊರೆಸುವ ಗುರಿ ಹೊಂದಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.