ಮುಂಬೈ(ಪಿಟಿಐ): ಬೇಜವಾಬ್ದಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೋಮವಾರ ವಿಧಾನಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ.
ಬಂಜರು ಭೂಮಿಗೆ ನೀರಾವರಿ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ರೈತರು ಉಪವಾಸ ನಡೆಸುತ್ತಿರುವುದರ ಬಗ್ಗೆ ಪತ್ರಕರ್ತರು ಗಮನ ಸೆಳೆದಾಗ ಅಣೆಕಟ್ಟೆಯಲ್ಲಿ ನೀರಿಲ್ಲದಿದ್ದರೆ ನಾನು ಮೂತ್ರ ಮಾಡಿ ತುಂಬಿಸಲೇ ಎಂಬ ಬೇಜವಾಬ್ದಾರಿ ಹೇಳಿಕೆ ನೀಡಿದ್ದರು.
ಅಜಿತ್ ಪವಾರ್ ಅವರ ಹೇಳಿಕೆ ಬಾರೀ ವಿವಾದಕ್ಕೆ ಕಾರಣವಾಗಿತ್ತು. ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ವಿರೋಧ ಪಕ್ಷಗಳು ಪಟ್ಟುಹಿಡಿದಿದ್ದವು.
ವಿಧಾನಸಭೆ ಕಲಾಪದಲ್ಲಿ ಭಾಗವಹಿಸಿ ಅವರು ಜನತೆಯ ಕ್ಷಮೆ ಕೋರಿದರು. ನಾನು ಉದ್ದೇಶ ಪೂರ್ವಕವಾಗಿ ಈ ಮಾತುಗಳನ್ನಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.