ಶಿವಮೊಗ್ಗ: ಜನಸಂಖ್ಯಾ ಸ್ಫೋಟದಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಸಮಸ್ಯೆಗಳು ಹೆಚ್ಚಾಗುತ್ತಿದೆ ಎಂದು ವೈದ್ಯಾಧಿಕಾರಿ ಡಾ.ಭಾರತೀದೆವಿ ಆತಂಕ ವ್ಯಕ್ತಪಡಿಸಿದರು.
ನಗರದ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ಭಾರತೀಯ ಕುಟುಂಬ ಕಲ್ಯಾಣ ಸಂಘ ಸಂಯುಕ್ತವಾಗಿ ಹಮ್ಮಿಕೊಂಡಿದ್ದ `ವಿಶ್ವ ಜನಸಂಖ್ಯಾ ದಿನಾಚರಣೆ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನಸಂಖ್ಯೆ ಹೆಚ್ಚಳದಿಂದ ಬಡತನ ಹಾಗೂ ಇತರ ಸಮಸ್ಯೆಗಳು ಎದುರಾಗುತ್ತವೆ. ಇದರಿಂದ ಆಹಾರ ಪೂರೈಕೆಯಲ್ಲಿ ಕೊರತೆ ಉಂಟಾಗುತ್ತಿದೆ. ಬಡ ಹಾಗೂ ಕೆಳ ಮಧ್ಯಮ ವರ್ಗದವರಿಗೆ ಪೌಷ್ಟಿಕ ಆಹಾರದ ಸಮಸ್ಯೆ ಕಾಡುತ್ತದೆ ಎಂದರು.
ಆದ್ದರಿಂದ, ಜನಸಂಖ್ಯೆ ನಿಯಂತ್ರಣದ ಕಡೆಗೆ ಗಮನಹರಿಸುವ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ಕಡಿಮೆ ಬೆಲೆ ಇರುವ ಆದರೆ, ಹೆಚ್ಚು ಪೌಷ್ಟಿಕಾಂಶ ಇರುವ ಆಹಾರ ಪದಾರ್ಥಗಳ ಸೇವನೆ ಬಗ್ಗೆ ಯೋಜನೆ ಮಾಡಿಕೊಳ್ಳಬೇಕು. ಈ ಮೂಲಕ ಅಪೌಷ್ಟಿಕತೆ, ರಕ್ತಹೀನತೆಯಿಂದ ಪಾರಾಗಬಹುದು ಎಂದು ತಿಳಿಸಿದರು.
ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎ.ಅತ್ತಾರ್ ಮಾತನಾಡಿ, ಚಿಕ್ಕ ಕುಟುಂಬ ಸುಖೀ ಕುಟುಂಬ ಎಂಬ ಮಾತನ್ನು ಅರಿತು, ಯುವಜನತೆ ಜನಸಂಖ್ಯೆ ನಿಯಂತ್ರಣದ ಬಗ್ಗೆ ಅರಿವು ಬೆಳಿಸಿಕೊಳ್ಳಬೇಕು ಎಂದು ಹೇಳಿದರು.
ಸಂಸ್ಥೆ ಮುಖ್ಯಸ್ಥೆ ಯಶೋಧರಮ್ಮ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಆರೋಗ್ಯ ಸಹಾಯಕಿ ಮೇರಿ, ಸುಬ್ಬಣ್ಣ, ಶಿಕ್ಷಕರಾದ ಈ.ಸಿ.ಬಂಗೇರ, ಎನ್.ನರಸಿಂಹ ಉಪಸ್ಥಿತರಿದ್ದರು. ತೇಜಸ್ವಿನಿ ಸ್ವಾಗತಿಸಿದರು. ಮಹೇಶ್ ಕಾರ್ಯಕ್ರಮ ನಿರೂಪಿಸಿದರು. ವತ್ಸಲಾ ವಂದಿಸಿದರು.