ಚಾಮರಾಜನಗರ: `ಮುಂದಿನ ವರ್ಷ ಮಂಡ್ಯ ಮತ್ತು ಚಾಮರಾಜನಗರ ಎರಡೂ ಜಿಲ್ಲೆಗಳ ಆಶ್ರಯದಲ್ಲಿ ಜಲಪಾತೋತ್ಸವವನ್ನು ಒಂದೆಡೆ ವಿಜೃಂಭಣೆಯಿಂದ ಆಚರಿಸಲಾಗುವುದು' ಎಂದು ವಸತಿ ಸಚಿವ ಅಂಬರೀಷ್ ತಿಳಿಸಿದರು.
ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿಯಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾನುವಾರ ನಡೆದ ಜಲಪಾತೋತ್ಸವ ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರವಾಸಿ ಮಾರ್ಗದರ್ಶಿಗಳ ಸಂಘ ಉದ್ಘಾಟಿಸಿ ಅವರು ಮಾತನಾಡಿದರು.
ಕಾವೇರಿ ಮತ್ತು ಕಬಿನಿ ನದಿಗಳು ಎರಡೂ ಜಿಲ್ಲೆಗಳ ಜನರ ಜೀವನಾಡಿಯಾಗಿವೆ. ಭರಚುಕ್ಕಿ ಪ್ರಕೃತಿ ಮಡಿಲಿನ ಸುಂದರ ತಾಣವಾಗಿದ್ದು, ಹೆಚ್ಚು ಪ್ರವಾಸಿಗರನ್ನು ಆಕರ್ಷಿಸಲು ಮುಂದಿನ ದಿನಗಳಲ್ಲಿ ಇನ್ನೂ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತಗಾರರಾಗಿದ್ದು, ಅವರು ಅಧಿಕಾರ ಹಿಡಿಯುತ್ತಿದ್ದಂತೆಯೇ ರಾಜ್ಯದಲ್ಲಿ ಎಲ್ಲ ನದಿಗಳು ತುಂಬಿಹರಿಯುತ್ತಿವೆ. ರೈತರು ನಿಟ್ಟುಸಿರು ಬಿಡುವಂತಾಗಿದೆ. ಜನರಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿವೃದ್ಧಿ ಪರ ಯೋಜನೆಗಳನ್ನು ನೀಡಲಿದ್ದಾರೆ ಎಂದು ಹೇಳಿದರು.
ಚಿತ್ರರಂಗದಲ್ಲಿ ಅನೇಕ ಏಳುಬೀಳುಗಳ ನಡುವೆಯೂ ಪ್ರೇಕ್ಷಕರು ನನ್ನನ್ನು ಬೆಳೆಸಿದಂತೆ ರಾಜಕೀಯದಲ್ಲೂ ನನ್ನನ್ನು ಬೆಳೆಸಿದ್ದಾರೆ. ಜನತೆಯ ಸೇವೆಯೇ ನನ್ನ ಗುರಿ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಮಾತನಾಡಿ, ಜಿಲ್ಲೆಯ ಎಲ್ಲ ಪ್ರವಾಸಿ ಕೇಂದ್ರಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಪ್ರವಾಸಿ ಕೇಂದ್ರ ಅಭಿವೃದ್ಧಿಗಳ ಚಾಲನೆಯ ಮೊದಲ ಕಾರ್ಯಕ್ರಮ ಇದಾಗಿದೆ. ಮುಂದಿನ ದಿನಗಳಲ್ಲಿ ಪ್ರವಾಸಿಗರ ಆಕರ್ಷಣೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಶಾಸಕ ಆರ್. ನರೇಂದ್ರ ಮಾತನಾಡಿ, ಮುಂದಿನ ವರ್ಷ ಜಲಪಾತೋತ್ಸವವನ್ನು 3 ದಿನಗಳ ಕಾಲ ಆಚರಿಸುವಂತಾಗಬೇಕು. ಸ್ಥಳೀಯ ಕಲಾವಿದರ ಪ್ರತಿಭೆಗೆ ಅವಕಾಶ ಕಲ್ಪಿಸುವ ಮೂಲಕ ರಾಜ್ಯದ ಎಲ್ಲೆಡೆಯಿಂದ ಪ್ರವಾಸಿಗರು ಆಗಮಿಸುವಂತೆ ವಿಶೇಷ ಕಾರ್ಯಕ್ರಮ ರೂಪಿಸಲು ಸಚಿವರ ಗಮನ ಸೆಳೆಯಲಾಗುವುದು. ಜಿಲ್ಲೆ ಆರ್ಥಿಕವಾಗಿ ಹಿಂದುಳಿದಿದ್ದರೂ, ನೈಸರ್ಗಿಕ ಸಂಪತ್ತು ಹಾಗೂ ಲಕ್ಷಾಂತರ ಪ್ರವಾಸಿಗರನ್ನು ಕೈಬೀಸಿ ಕರೆಯುವ ಐತಿಹಾಸಿಕ ತಾಣಗಳನ್ನು ಹೊಂದಿದೆ ಎಂದು ಹೇಳಿದರು.
ಶಾಸಕ ಎಸ್. ಜಯಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಿ.ಎಸ್. ನರಸಿಂಹಮೂರ್ತಿ, ಜಿಲ್ಲಾಧಿಕಾರಿ ಎಂ.ವಿ. ಸಾವಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ರಾಜೇಂದ್ರಪ್ರಸಾದ್, ಉಪ ವಿಭಾಗಾಧಿಕಾರಿ ಸತೀಶ್ಬಾಬು, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜಪ್ಪ, ಪ್ರವಾಸೋದ್ಯಮೆ ಸಹಾಯಕ ನಿರ್ದೇಶಕ ಎಚ್.ಪಿ. ಜನಾರ್ದನ, ಜಿಲ್ಲಾ ಪಂಚಾಯಿತಿ ಸದಸ್ಯೆ ಶಿವಮ್ಮ, ಈಶ್ವರ್, ಪುಟ್ಟಬುದ್ಧಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ದಾಕ್ಷಾಯಿಣಿ, ತಾಲ್ಲೂಕು ಪಂಚಾಯಿತಿ ಸದಸ್ಯೆ ಶಾಂತಕುಮಾರಿ, ಮುರಳಿ, ಸತ್ತೇಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಅರುಣ್ಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.