ಮಂಗಳೂರು: ಜಲ್ಲಿ ಕ್ರಶರ್ಗಳನ್ನು ಸಂಪೂರ್ಣವಾಗಿ ಮುಚ್ಚಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಕ್ಷಾಂತರ ಕಟ್ಟಡ ಕಾರ್ಮಿಕರ ಬದುಕು ಶೋಚನೀಯವಾಗಿದೆ, ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಬಿಕ್ಕಟ್ಟನ್ನು ಬಗೆಹರಿಸಬೇಕು ಎಂದು ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ಕಾರ್ಮಿಕರು ಸೋಮವಾರ ಜಿಲ್ಲಾಧಿಕಾರಿ ಬಳಿ ಪ್ರತಿಭಟನಾ ಪ್ರದರ್ಶನ ನಡೆಸಿದರು.
ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಹೈಕೋರ್ಟ್ ತಡೆಯಾಜ್ಞೆ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ನಿಷೇಧಾಜ್ಞೆಯಿಂದಾಗಿ 200ರಷ್ಟು ಜಲ್ಲಿ ಕ್ರಶರ್ಗಳು ಮುಚ್ಚಿವೆ. ಇದರಿಂದ ಲಕ್ಷಾಂತರ ಕಾರ್ಮಿಕರು ಬೀದಿಪಾಲಾಗಿದ್ದಾರೆ. ಪರಿಸರಕ್ಕೆ ಹಾನಿ ಉಂಟುಮಾಡದ ಜಲ್ಲಿ ಕ್ರಶರ್ಗಳನ್ನು ತಕ್ಷಣ ಪುನರಾರಂಭಿಸುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದರು.
ಸಂಘಟನೆಯ ಜಿಲ್ಲಾ ಮುಖಂಡ ರಾಮಣ್ಣ ವಿಟ್ಲ ಮಾತನಾಡಿ, ಬಿಜೆಪಿ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು. ಯೋಗೀಶ್ ಜಪ್ಪಿನಮೊಗರು, ಶಶೀಂದ್ರ ಕುಕ್ಯಾನ್, ಅಶೋಕ್ ಶೆಟ್ಟಿ, ರವಿಚಂದ್ರ ಕೊಂಚಾಡಿ ಇತರರು ನೇತೃತ್ವ ವಹಿಸಿದ್ದರು.