ಬೆಂಗಳೂರು: ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ರಾಮ್ ಅವರು ದಲಿತರಾಗಿದ್ದ ಕಾರಣ ಅಂದು ಪ್ರಧಾನಿ ಅಥವಾ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಲು ಸಾಧ್ಯವಾಗಲಿಲ್ಲ ಎಂದು ಅಖಿಲ ಭಾರತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಡಾ.ಹನುಮಂತಪ್ಪ ಅಭಿಪ್ರಾಯಪಟ್ಟರು.
ಜಲ ಮಂಡಳಿಯ ಸ್ವಚ್ಛತಾ ಕೆಲಸಗಾರರ ಸಂಘಟನೆ ಗುರುವಾರ ನಗರದಲ್ಲಿ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ರಾಮ್ ಅವರ ಜಯಂತಿಯ 17ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದ ಪ್ರಧಾನಿ ಅಥವಾ ರಾಷ್ಟ್ರಪತಿಯಾಗಲು ಎಲ್ಲ ರೀತಿಯಲ್ಲೂ ಅರ್ಹರಾಗಿದ್ದ ಜಗಜೀವನ್ರಾಮ್ ಅವರಿಗೆ ಕೇವಲ ಜಾತಿಯ ಕಾರಣಕ್ಕೆ ಆ ಸ್ಥಾನಗಳು ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕಳೆದ 50 ವರ್ಷಗಳಿಂದ ಸರ್ಕಾರ ದಲಿತರ ಏಳಿಗೆಗಾಗಿ ಸಾಕಷ್ಟು ಅನುದಾನವನ್ನು ನೀಡುತ್ತಿದೆ. ಆದರೆ ಈ ಬಗ್ಗೆ ಜನರಲ್ಲಿ ಅರಿವಿಲ್ಲದ ಕಾರಣ ಅದು ಸರಿಯಾಗಿ ಫಲಾನುಭವಿಗಳನ್ನು ತಲುಪುತ್ತಿಲ್ಲ ಎಂದರು. ‘ಈ ಹಿನ್ನೆಲೆಯಲ್ಲಿ ಇನ್ನಾದರೂ ದಲಿತರು ಸ್ವಾಭಿಮಾನಿಗಳಾಗಿ ತಮ್ಮ ಹಕ್ಕುಗಳ ರಕ್ಷಣೆಗಾಗಿ ಹೋರಾಟ ನಡೆಸಬೇಕು. ಜೊತೆಗೆ ನಮ್ಮಲ್ಲೇ ಒಡಕು ಉಂಟುಮಾಡಿ ಆಳುವ ಜನರಿಗೆ ಪಾಠ ಕಲಿಸಲು ಮುಂದಾಗಬೇಕು’ ಎಂದು ಕರೆ ನೀಡಿದರು.
ಚಿತ್ರನಟ ಎಸ್.ಶಿವರಾಮ್ ಮಾತನಾಡಿ, ಚಿತ್ರ ರಂಗದಲ್ಲಿ ಪ್ರಶಸ್ತಿಗಳ ಹಂಚಿಕೆಯಲ್ಲೂ ಲಾಬಿ ಪ್ರಾರಂಭವಾಗಿದ್ದು, ಪ್ರಶಸ್ತಿಗಾಗಿ ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ‘ಚಲನಚಿತ್ರಗಳಿಗೆ ನೀಡುವ ಕೇಂದ್ರ ಪ್ರಶಸ್ತಿಗಳಲ್ಲಿ ಹೆಚ್ಚಿನವು ತಮಿಳುನಾಡಿನ ಪಾಲಾಗುತ್ತಿದ್ದು, ರಾಜ್ಯಕ್ಕೆ ನಿರೀಕ್ಷಿತ ಮಟ್ಟದಲ್ಲಿ ಪ್ರಶಸ್ತಿಗಳು ಸಿಗುತ್ತಿಲ್ಲ. ಇದಕ್ಕೆ ಕಾರಣ ನಮ್ಮಲ್ಲಿ ಹೋರಾಟದ ಮನೋಭಾವ ಇಲ್ಲದೇ ಇರುವುದು’ ಎಂದು ದೂರಿದರು.
ಹೈಕೋರ್ಟ್ ಮೌಖಿಕವಾಗಿ ಸೂಚಿಸಿರುವಂತೆ ಅಶ್ಲೀಲ ಚಲನಚಿತ್ರಗಳಿಗೆ ಕಡಿವಾಣ ಹಾಕಿ, ಒಳ್ಳೆಯ ಮೌಲ್ಯಗಳನ್ನು ಹೊಂದಿರುವ ಚಿತ್ರಗಳಿಗೆ ಪ್ರೋತ್ಸಾಹ ನೀಡುವ ಕೆಲಸ ಆಗಬೇಕಿದೆ ಎಂದು ಅಭಿಪ್ರಾಯಪಟ್ಟರು. ನಟ ಶಿವರಾಮ್ ಸೇರಿದಂತೆ ಇತರೆ ಗಣ್ಯರನ್ನು ಸನ್ಮಾನಿಸಲಾಯಿತು. ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ಎಂ.ಎಸ್.ರವಿಶಂಕರ್, ಮಾಜಿ ಮೇಯರ್ ಹುಚ್ಚಪ್ಪ, ಪ್ರಧಾನ ಎಂಜಿನಿಯರ್ ಟಿ.ವೆಂಕಟರಾಜು ಹಾಗೂ ಜಲಮಂಡಳಿ ಸಿಬ್ಬಂದಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.