ಶಿವಮೊಗ್ಗ: ಜಿಲ್ಲಾ ಎಂಟನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಾನಪದ ವಿದ್ವಾಂಸ ಎನ್. ಹುಚ್ಚಪ್ಪ ಮಾಸ್ತರ್ ಆಯ್ಕೆಯಾಗಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜೂನ್ 1, 2ರಂದು ಹಮ್ಮಿಕೊಂಡಿರುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಗರದ ಜಾನಪದ ವಿದ್ವಾಂಸ, ಲೇಖಕ, ರಂಗಕರ್ಮಿ ಹುಚ್ಚಪ್ಪ ಮಾಸ್ತರ್ ಅವರನ್ನು ಆಯ್ಕೆ ಮಾಡಿದೆ.
ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ಅಧ್ಯಕ್ಷತೆಯಲ್ಲಿ ಮಾರ್ಚ್ 29ರಂದು ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದೆ.
ಈ ಹಿಂದೆ 2011ರಲ್ಲಿ ನಡೆದ 7ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಜಯಾರಾಜಶೇಖರ್ ಆಯ್ಕೆ ಆಗಿದ್ದರು.
ಮೂಲ ಸಾಹಿತ್ಯಕ್ಕೆ ಸಂದ ಗೌರವ: `ಜನಪದದಿಂದ ಶಿಷ್ಟ ಸಾಹಿತ್ಯ ಬೆಳೆದಿದ್ದು; ಇಂತಹ ಕ್ಷೇತ್ರದಲ್ಲಿ ಕೆಲಸ ಮಾಡಿದ ನನ್ನನ್ನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಆಯ್ಕೆ ಮಾಡಿರುವುದು ಮೂಲ ಸಾಹಿತ್ಯಕ್ಕೆ ತಂದ ಗೌರವ ಎಂದು ಭಾವಿಸುತ್ತೇನೆ.
ಬುಡಕಟ್ಟು ಜನಾಂಗದ ಅಭಿವೃದ್ಧಿ ಬಗ್ಗೆ ಮಾಡಿದ ಕೆಲಸಕ್ಕೆ ಸಿಕ್ಕ ಮನ್ನಣೆ ಎಂದುಕೊಳ್ಳುತ್ತೇನೆ' ಎಂದು ಸಾಗರದ ಜಾನಪದ ವಿದ್ವಾಂಸ ಎನ್. ಹುಚ್ಚಪ್ಪ ಮಾಸ್ತರ್ `ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.